ಮಾಧ್ಯಮದಲ್ಲಿ ಉದ್ಯೋಗಾವಕಾಶಗಳು ಒಂದು ದಿನದ ತರಬೇತಿ ಕಾರ್ಯಾಗಾರ
ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳುವ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶಿವಾನಂದ ನಾಯಕ ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿ.ಎಂ. ಉಷಾ ಯೋಜನೆಯ ಆಶ್ರಯದಡಿ ಬುಧವಾರ ನಡೆದ ಮಾಧ್ಯಮದಲ್ಲಿ ಉದ್ಯೋಗಾವಕಾಶಗಳು ಎಂಬ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಹೆಚ್ಚು ಹೆಚ್ಚು ಜ್ಞಾನವನ್ನು ಸಂಪಾದಿಸುವ ಮೂಲಕ ಬೌದ್ಧಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕು. ಆಗ ಭವಿಷ್ಯದ ಜೀವನವನ್ನು ಸದೃಢವಾಗಿ ಕಟ್ಟಲು ಸಾಧ್ಯ. ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶಗಳಿದ್ದು, ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ಈ ಅವಕಾಶವನ್ನು ಅಪ್ಪಿಕೊಳ್ಳಲು ಈಗಿಂದಲೇ ಅಣಿಯಾಗಬೇಕು. ಈ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಾಗಾರವು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಪ್ರೇರಣೆಯಾಗಲಿ ಎಂದರು.
ಪತ್ರಕರ್ತ ಸಂದೇಶ್ ಎಸ್.ಜೈನ್ ಮಾತನಾಡಿ, ಜಗತ್ತು ಅವಕಾಶ ಮತ್ತು ಹೊಸತನಗಳನ್ನು ತೆರೆದಿಟ್ಟುಕೊಂಡಿದೆ. ಇಡೀ ಜಗತ್ತಿಗೆ ಸಂಕಷ್ಟವನ್ನು ತಂದುಕೊಟ್ಟ ಕೊರೋನಾದಿಂದಾಗಿ ಬದುಕೇ ದುಸ್ತರವಾದ ಸಂದರ್ಭದಲ್ಲಿಯೂ ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳು ಸಮಾಜದ ಮುಖ್ಯ ಭೂಮಿಕೆಗೆ ಬಂದ ಪರಿಣಾಮ ರಾಜ್ಯದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಅದರಲ್ಲೇ ತಮ್ಮ ಬದುಕನ್ನು ಕಂಡುಕೊಳ್ಳುವಂತಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಯೂಟೂಬರ್ಗಳು ಸೃಷ್ಟಿಯಾಗಿ ತಮ್ಮದೇ ಆದ ರೀತಿಯಲ್ಲಿ ಸ್ವತಂತ್ರ ಉದ್ಯೋಗವನ್ನು ಕೈಗೊಂಡು ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯಿದೆ ಎಂದು ಅವರಿವರ ಮೇಲೆ ಬೆರಳು ತೋರಿಸುವುದು ತಪ್ಪು. ಇಂದು ಬದಲಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಅವಕಾಶಗಳು ಸಾಕಷ್ಟಿವೆ. ಅವುಗಳನ್ನು ಒಪ್ಪಿಕೊಳ್ಳುವ ಮತ್ತು ಅಪ್ಪಿಕೊಳ್ಳುವ ಕ್ರಿಯಾಶೀಲತೆ ಮತ್ತು ಮನಸ್ಸು ನಮ್ಮದಾಗಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಡಿ. ಒಕ್ಕುಂದ, ಭವಿಷ್ಯದ ಈ ನಾಡಿನ ಪ್ರಜ್ಞಾವಂತ ನಾಗರಿಕರಾಗಬೇಕಾದ ವಿದ್ಯಾರ್ಥಿಗಳು ಕನಸನ್ನು ಹೊಂದಿರಬೇಕು. ಅದನ್ನು ನನಸಾಗಿಸಲು ಸದಾ ಪ್ರಯತ್ನಶೀಲರಾಗಬೇಕು ಎಂದರು.
ಡಾ. ಎಂ.ಡಿ. ಒಕ್ಕುಂದರ ಮಾರ್ಗದರ್ಶನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸಿದ್ದಪಡಿಸಿದ ಕಾಲೇಜಿನ ವೆಬ್ ಸೈಟ್ನ್ನು ಅನಾವರಣಗೊಳಿಸಲಾಯಿತು.ವರ್ಷಾ ಕೋಲೆ ಪ್ರಾರ್ಥಿಸಿದರು. ಪ್ರಾಧ್ಯಾಪಕ ಮನೋಹರ ಉಡಚಂಚಿ ಸ್ವಾಗತಿಸಿದರು. ಪ್ರಾಧ್ಯಾಪಕಿ ನಿಶಾತ್ ಶರೀಫ್ ಅತಿಥಿಗಳನ್ನು ಪರಿಚಯಿಸಿದರು. ಐಕ್ಯೂಎಸಿ ಸಂಚಾಲಕಿ ತಸ್ಲಿಮಾ ಜೋರುಂ ವಂದಿಸಿದರು. ಉಪನ್ಯಾಸಕ ಉಮೇಶ ಗೌಡ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ಧಾರವಾಡದ ಆಕಾಶವಾಣಿಯ ನಿವೃತ್ತ ನಿರ್ದೇಶಕ ಸಿ.ಯು. ಬೆಳ್ಳಕ್ಕಿ ಮಾಧ್ಯಮದಲ್ಲಿ ಉದ್ಯೋಗಾವಕಾಶಗಳು: ಪೂರ್ವ ಸಿದ್ಧತೆಯ ಬಗ್ಗೆ, ಹಿರಿಯ ಪತ್ರಕರ್ತೆ ಸಿ.ಜಿ. ಮಂದಾಕಿನಿ ಪತ್ರಿಕಾ ಮಾಧ್ಯಮದಲ್ಲಿ ಉದ್ಯೋಗಾವಕಾಶಗಳು ಹಾಗೂ ಗುಲ್ಬರ್ಗದ ಡಾ. ಬಿ.ಆರ್. ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕ ಡಾ. ಅರುಣ್ ಜೋಳದ ಕೂಡ್ಲಗಿ ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗಾವಕಾಶಗಳು ಎಂಬ ವಿಚಾರದ ಬಗ್ಗೆ ಉಪನ್ಯಾಸ ನೀಡಿದರು. ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.