ಗದಗ: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ಜಿಲ್ಲೆಯಲ್ಲಿ ಏಪ್ರಿಲ್ 2025ರಿಂದ ಜೂನ್ 2025ರ ವರೆಗೆ 2505 ಜನನ ಘಟನೆಗಳು ನಿಗದಿತ ಸಮಯದಲ್ಲಿ ನೋಂದಣಿಯಾಗಿದ್ದು, ಶೇ. 55.38ರಷ್ಟು ಹಾಗೂ 1925 ಮರಣ ಘಟನೆಗಳು ನಿಗದಿತ ಸಮಯದಲ್ಲಿಯೇ ನೋಂದಣಿಯಾಗಿ ಶೇ. 78ರಷ್ಟು ಪ್ರಗತಿ ಸಾಧಿಸಲಾಗಿದೆ. ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಈ ಜನ್ಮ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಎಂದ ಅವರು, 2025ರಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜರುಗಿಸಿದ ವಿವರ ಹಾಗೂ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರು, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್., ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ. ಸೋನಾವಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ಡಿಡಿಎಲ್ಆರ್ ರುದ್ರಣ್ಣಗೌಡ ಜಿ.ಜೆ., ವಾರ್ತಾಧಿಕಾರಿ ವಸಂತ ಮಡ್ಲೂರ ಇದ್ದರು.