ಬಳ್ಳಾರಿ: ಕರ್ನಾಟಕದ ತೆರಿಗೆ ಹಣ ನೀಡುವಿಕೆಯಲ್ಲಿ ಕೇಂದ್ರವು ತಾರತಮ್ಯ ಎಸಗಬಾರದು ಹಾಗೂ ಬರಗಾಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನೀಡಬೇಕಾದ ಪರಿಹಾರ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿಪತ್ರ ಕಳಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜೆ. ಸತ್ಯಬಾಬು ಹಾಗೂ ಚಂದ್ರಕುಮಾರಿ ಅವರು ಮಾತನಾಡಿ, ಕೇಂದ್ರದ ಪ್ರಾಯೋಜಿತ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರಗಳನ್ನು ಗುರಿಯಾಗಿರಿಸಿಕೊಂಡು ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ದಳ(ಸಿಬಿಐ) ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು(ಐಟಿ) ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ರಾಜ್ಯದ ವಿವಿಗಳ ವಿಚಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪವೂ ನಿಲ್ಲಬೇಕು ಎಂದು ಆಗ್ರಹಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಜಿಲ್ಲಾ ಪ್ರಮುಖರು ಹಾಗೂ ಸದಸ್ಯರು ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಘೋಷಣೆ ಕೂಗಿದರು.ಪಕ್ಷದ ಜಿಲ್ಲಾ ಪ್ರಮುಖರಾದ ಪಿ.ಆರ್. ವೆಂಕಟೇಶ್, ಎಂ. ತಿಪ್ಪೇಸ್ವಾಮಿ ಕುಡಿತಿನಿ, ಯು. ಎರಿಸ್ವಾಮಿ, ಬೈಲಾ ಹನುಮಂತಪ್ಪ, ತಿಪ್ಪರುದ್ರಪ್ಪ ವೈ. ಕಗ್ಗಲ್, ಈರಮ್ಮ, ಕಿರಣ್ ಹಾಗೂ ಹಾಲಂಬಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.