ಕನ್ನಡಪ್ರಭ ವಾರ್ತೆ ಧಾರವಾಡ
ಸಾರಿಗೆ ನಿಗಮಗಳ ನೌಕರರಿಗೆ ಭವಿಷ್ಯ ನಿಧಿ ಬಡ್ಡಿಯ ದರವನ್ನು ನಿಗದಿಪಡಿಸುವ ಸಲುವಾಗಿ ಮಾ. 1ರಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಭವಿಷ್ಯ ನಿಧಿ ಸಭೆಯಲ್ಲಿ ಶೇ. 8.15 ರಿಂದ 8.25ರಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಆದರೆ, ಇದು ತೀರಾ ಕಡಿಮೆ ಇದೆ. ಇದನ್ನು ಕನಿಷ್ಠ ಶೇ. 9ಕ್ಕೆ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಒಂದಾದ ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ಮತ್ತು ಸವಲತ್ತುಗಳನ್ನು ಸಾರಿಗೆ ನೌಕರರಿಗೂ ವಿಸ್ತರಿಸುವ ಭರವಸೆಯನ್ನು ಕಾಲ ವಿಳಂಬವಿಲ್ಲದೆ ಕೂಡಲೇ ಜಾರಿ ಮಾಡಬೇಕು. ಈ ಹಿಂದೆ ಡಿಸೆಂಬರ್ 2020 ಮತ್ತು ಏಪ್ರಿಲ್ 2021ರ ಮುಷ್ಕರಕ್ಕೆ ಸಂಬಂಧಿಸಿದಂತೆ ನೌಕರರ ವಿರುದ್ಧ ಕೈಗೊಂಡ ಎಲ್ಲ ಶಿಸ್ತಿನ ಕ್ರಮ, ವಜಾ ಮತ್ತು ಪೊಲೀಸ್ ಪ್ರಕರಣಗಳನ್ನು ರದ್ದುಮಾಡಿ ಮುಷ್ಕರದ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು. ಇದೇ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ನಾಲ್ಕೂ ಸಾರಿಗೆ ನಿಗಮಗಳ ಸಮಾನ ಮನಸ್ಕರ ವೇದಿಕೆಯ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.