ನಿಗದಿತ ಗುರಿ ಮುಟ್ಟಲು ಅಧಿಕಾರಿ ವರ್ಗ ಶ್ರಮವಹಿಸಲಿ

KannadaprabhaNewsNetwork | Updated : Jun 21 2025, 12:45 PM IST

ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ.ಬಿ.ಮಂಜುನಾಥ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

  ಚಳ್ಳಕೆರೆ :  ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ.ಬಿ.ಮಂಜುನಾಥ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಾರಂಭದಲ್ಲಿ ಎಲ್ಲಾ ಅಧಿಕಾರಿಗಳನ್ನು ಸ್ವಾಗತಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಶಶಿಧರ, ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ. ಸಭೆಗೂ ಸಹ ವಿಚಾರವನ್ನು ತಿಳಿಸಬೇಕಿದೆ. ಯಾವುದೇ ಕಾರಣಕ್ಕೂ ಪ್ರಗತಿ ಕುಂಠಿತವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಕಳೆದ ಬಾರಿ ನಡೆದ ಕೆಡಿಪಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಸಂಪೂರ್ಣವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಮಾರೋಪಾಧಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಾರಂಭದಲ್ಲಿ ಕೃಷಿ ಇಲಾಖೆ ಸಹಾಯಕ ನಿದೇಶಕ ಜೆ.ಅಶೋಕ್ ಮಾಹಿತಿ ನೀಡಿ, ಶೇಂಗಾ ಬೀಜ, ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಕಳೆದ 20 ದಿನಗಳಿಂದ ಮಳೆಯಾಗಿಲ್ಲ. ಮಳೆಯಾದರೆ ಮಾತ್ರ ಬಿತ್ತನೆ ಕಾರ್ಯ ಆರಂಭಗೊಳ್ಳಲಿದೆ. ಈಗಾಗಲೇ ಕೆಲವೆಡೆ ಶೇಂಗಾ ಬದಲಿ ತೊಗರಿ ಬಿತ್ತನೆಗೆ ಚಿಂತನೆ ನಡೆದಿದೆ. ರೈತರಿಗೆ ಅವಶ್ಯವಿರುವ ಬೀಜ, ಗೊಬ್ಬರ, ಕ್ರಿಮಿನಾಶ ದಾಸ್ತಾನು ಮಾಡಲಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಎಸ್‌ಟಿ ಕಲ್ಯಾಣಾಧಿಕಾರಿ ಶಿವರಾಜ್, ಬಿಸಿಎಂ ಅಧಿಕಾರಿ ರಮೇಶ್, ಮಾಹಿತಿ ನೀಡಿ ಈಗಾಗಲೇ ಎಲ್ಲಾ ಹಾಸ್ಟೆಲ್‌ಗಳು ವಿದ್ಯಾರ್ಥಿಗಳಿಂದ ತುಂಬಿವೆ, ಸರ್ಕಾರದ ನಿಯಮದ ಪ್ರಕಾರ ವಿದ್ಯಾರ್ಥಿಗಳಿಗೆ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಕೆ.ಎಸ್.ಸುರೇಶ್ ಮಾಹಿತಿ ನೀಡಿ, ಇತ್ತೀಚೆಗೆ ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಅನುಮತಿ ನೀಡದಂತೆ ಸೂಚನೆ ಬಂದಿದೆ. ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಆರಂಭ ಮಾಡಲಾಗಿದೆ ಎಂದರು.

ಮಧ್ಯ ಪ್ರವೇಶಿಸಿದ ಇಒ ಶಶಿಧರ, ಕೆಲವು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ 1 ರಿಂದ 5ನೇ ವಿದ್ಯಾರ್ಥಿಗಳಿಗೆ ಪ್ರಶ್ನೆ ಹಾಕಿದಾಗ ಸಮರ್ಪಕ ಉತ್ತರ ನೀಡಲಿಲ್ಲ, ಬೋಧನೆಯ ಕೊರತೆ ಎದ್ದು ಕಾಣುತ್ತಿದೆ ಎಂದರು. ಇದಕ್ಕೆ ಉತ್ತರಿಸಿ ಬಿಇಒ ನಿಧಿರ್ಷವಾದ ಶಾಲೆಯ ಹೆಸರು ಹೇಳಿದರೆ ಸಂಬಂಧಪಟ್ಟ ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಿ ಸರಿಪಡಿಸಲಾಗುವುದು ಎಂದು ಹೇಳಿದರು.

ಕುಡಿಯುವ ನೀರಿಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ, ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿವೆ ಎಂದರು.

ಆಡಳಿತಾಧಿಕಾರಿ ಡಾ.ಮಂಜುನಾಥ, ಕೆಲವೆಡೆ ಕುಡಿಯುವ ನೀರಿನ ಘಟಕಗಳ ರಿಪೇರಿ ಇಲ್ಲದೆ ಹಾಗೆ ಬಿಟ್ಟಿದ್ದೀರಿ ಈ ಬಗ್ಗೆ ಕ್ರಮಕೈಗೊಳ್ಳಿ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಆಡಳಿತಾಧಿಕಾರಿ ಡಾ.ಬಿ.ಮಂಜುನಾಥ ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೈಗೊಳ್ಳುವ ಎಲ್ಲಾ ನಿರ್ಣಯಗಳು ಸಕರಾತ್ಮಕವಾಗಿದ್ದು ಅಧಿಕಾರಿ ವರ್ಗ ಯಾವುದೇ ಕೊರತೆಯಾಗದಂತೆ ಜಾಗ್ರತೆ ವಹಿಸಬೇಕು. ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಸ್ಪಂದಿಸಬೇಕು, ಸರ್ಕಾರದಿಂದ ಬರುವ ವಿವಿಧ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಒಟ್ಟಾರೆ ತಾಲೂಕಿನ ಪ್ರಗತಿ ಏರುಮುಖವಾಗಬೇಕೆ ವಿನಃ ಇಳಿಮುಖವಾಗಬಾರದು ಎಂದರು.

ಸಭೆಯಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿ ಕುಮಾರ್‌ ನಾಯ್ಕ, ಪಶು ಅಧಿಕಾರಿ ಶ್ರೀನಿವಾಸ್, ಶಿಶು ಅಭಿವೃದ್ಧಿ ಅಧಿಕಾರಿ ರಾಜಾನಾಯ್ಕ, ಕಾರ್ಮಿಕ ಅಧಿಕಾರಿ ಕುಸುಮ ಸೇರಿದಂತೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

Read more Articles on