ಭಾರತೀಯ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಭಾರತೀಯ ವಿದ್ಯಾಸಂಸ್ಥೆ ಆವರಣದಲ್ಲಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ, ನಾಡಿನ ಉದ್ದಗಲಕ್ಕೂ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆ ಗ್ರಾಮೀಣ ಪ್ರದೇಶದ ಶ್ರಮಜೀವಿಗಳಿಂದ ಮಾತ್ರವೇ ಮಾತೃಭಾಷೆ ಉಸಿರಾಡುತ್ತಿದೆ. ಮೇಲಾಗಿ ಕನ್ನಡ ಶಾಲೆಗಳಲ್ಲಿ ಕೊರತೆಗಳ ನಡುವೆಯೇ ಓದಿದ ಅನೇಕರು ಉನ್ನತ ಹುದ್ದೆಗಳನ್ನು ಪಡೆದು ದೇಶಸೇವೆ ಮಾಡುತ್ತಿದ್ದಾರೆ. ಇವರೆಲ್ಲಾ ಕನ್ನಡದ ಕಟ್ಟಾಳುಗಳೇ ಆಗಿದ್ದಾರೆ. ಇದನ್ನು ಮನಗಂಡು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅವುಗಳನ್ನು ಖಾಸಗಿಯಂತೆ ಉನ್ನತೀಕರಿಸಲು ಶಾಸಕ, ಸಂಸದರು ಸೇರಿದಂತೆ ಜನ ಪ್ರತಿನಿಧಿಗಳು, ಸಂಘ- ಸಂಸ್ಥೆಗಳು ಮುಂದಾಗುವುದು ಅವಶ್ಯವಿದೆ ಎಂದು ಹೇಳಿದರು.
ಕನ್ನಡ ಸೇನೆ ಜಿಲ್ಲಾ ಘಟಕ ಭಾರತೀ ಶಾಲೆಯ ಆವರಣದಲ್ಲಿ ಏರ್ಪಡಿಸಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನುಡಿಹಬ್ಬದ ಜಾಗೃತಿ ಜತೆಗೆ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ಸಹಿತ ಬ್ಯಾಗ್ ವಿತರಿಸುವ ಮೂಲಕ ಅವರ ಓದಿಗೆ ಸಹಾಯ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ವಿದ್ಯಾರ್ಥಿಗಳು ಕೂಡ ಶಿಕ್ಷಣ ಪಡೆದು ಉದ್ಯೋಗಕ್ಕೆ ಸೇರಿದ ಸಂದರ್ಭದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಆಗ ಮಾತ್ರ ನಾವು ಪಡೆದ ದಾನಕ್ಕೆ ಅರ್ಥವಿರುತ್ತದೆ ಎಂದರು.ಜಿಪಂ ಮಾಜಿ ಸದಸ್ಯ ಹಾಗೂ ವಕೀಲ ಕೆ.ಎಂ.ಮುನೇಗೌಡ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದುವ ಮಕ್ಕಳು ಬಡತನದ ಹಿನ್ನೆಲೆಯಲ್ಲಿ ಬಂದ ಮಕ್ಕಳೇ ಆಗಿದ್ದಾರೆ. ನೀವು ಓದಿನ ಜತೆಗೆ ತಂದೆ- ತಾಯಿಗಳ ಕಷ್ಟವನ್ನು ಅರ್ಥಮಾಡಿಕೊಳ್ಳಬೇಕು.ಶಾಲೆಯಲ್ಲಿ ಗುರುಗಳ ಮಾರ್ಗದರ್ಶನದಲ್ಲಿ ಉತ್ತಮವಾಗಿ ಓದಿದರೆ ಮಾತ್ರ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಆಗುತ್ತದೆ ಎಂದು ಕಿವಿಮಾತು ಹೇಳಿದರು.
ಕನ್ನಡ ಸೇನೆ ಜಿಲ್ಲಾ ಘಟಕ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತೀಯ ಶಾಲೆಯ 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ಮತ್ತು ನೋಟ್ ಪುಸ್ತಕ ಗಳನ್ನು ವಿತರಿಸಿದ ಗಣ್ಯರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್, ಮಾನವ ಹಕ್ಕುಗಳ ಜಿಲ್ಲಾ ಅಧ್ಯಕ್ಷ ಕೃಷ್ಣಪ್ಪ, ಹಿರಿಯ ವಕೀಲ ಉದಯ್ ಕುಮಾರ್, ಶಿಡ್ಲಘಟ್ಟ ತಾಲೂಕು ಕಸಾಪ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ ಮತ್ತಿತರರು ಇದ್ದರು.