- ಶ್ರೀಸಾಯಿ ಗುರುಕುಲ ಶಾಲೆಯಲ್ಲಿ ಮಕ್ಕಳ ದಿನಾಚರಣೆ-ರಾಜ್ಯೋತ್ಸವ
ಮಕ್ಕಳು ಸದಾ ಕ್ರಿಯಾಶೀಲರಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸತ್ಪ್ರಜೆಗಳಾಗಬೇಕು ಎಂದು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಟ ಹೊಂಗಿರಣ ಚಂದ್ರು ಹೇಳಿದರು.
ಪಟ್ಟಣದ ಹೊರವಲಯದ ಎಚ್.ಕಡದಕಟ್ಟೆಯ ಶ್ರೀ ಸಾಯಿ ಗುರುಕುಲ ವಸತಿಯುತ ಸಿಬಿಎಸ್ಇ ಶಾಲಾ-ಕಾಲೇಜುಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ದೇಶದ ಭಾಷೆ, ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಪಾಶ್ಚಿಮಾತ್ಯ ದೇಶಗಳು ಭಾರತೀಯ ಸಂಸ್ಕೃತಿಯನ್ನು ಅನುಕರಣೆ ಮಾಡುತ್ತಿದ್ದಾರೆ. ಆದರೆ ನಮ್ಮ ಯುವಪೀಳಿಗೆಯು ಪಾಶ್ಚಿಮಾತ್ಯರನ್ನು ಅನುಕರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಇದೇ ವೇಳೆ ಹೊಂಗಿರಣ ಚಂದ್ರು ಉತ್ತರ ಕುಮಾರನ ಕಥೆಯ ಹಾಸ್ಯದ ಮೂಲಕ ಮಕ್ಕಳನ್ನು ರಂಜಿಸಿದರು. ಕರ್ಣನ ಪಾತ್ರದ ಮೂಲಕ ಮನೋಜ್ಞವಾಗಿ ಅಭಿನಯಿಸಿ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾದರು. ಶಾಲಾ ಮಕ್ಕಳಿಂದ ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಹೆಸರಾಂತ ಕವಿ, ಲೇಖಕರ, ರಾಜರುಗಳ ವೇಷ-ಭೂಷಣಗಳನ್ನು ಧರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
- - - -16ಎಚ್.ಎಲ್.ಐ1.: