ರಾಮನಗರ: ಸ್ವತಂತ್ರ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಭಾರತೀಯರಾಗಿ ಬದುಕು ನಡೆಸೋಣ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಹೇಳಿದರು.
ನಗರದ ಕಂದಾಯ ಭವನದ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬ್ರಿಟೀಷರ ಆಳ್ವಿಕೆಯಿಂದ ನಮ್ಮನ್ನು ಮುಕ್ತಗೊಳಿಸಿ, ಭಾರತಕ್ಕೆ ಸ್ವತಂತ್ರ ತಂದುಕೊಡುವಲ್ಲಿ ಹಲವು ಮಹನೀಯರುಗಳ ಶ್ರಮವಿದೆ. ರಾಷ್ಟ್ರದ ಅನೇಕ ನಾಯಕರು ಶಾಂತಿ, ಅಹಿಂಸೆ ಮೂಲಕ ತಮ್ಮ ತ್ಯಾಗ, ಬಲಿದಾನ ನೀಡಿ ಸ್ವತಂತ್ರ ತಂದು ಕೊಟ್ಟಿದ್ದಾರೆ. ಅವರನ್ನು ಇಂದು ಸ್ಮರಿಸುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ, ಜೊತೆಗೆ ರಾಷ್ಟ್ರದ ಸ್ವತಂತ್ರ, ಭಕ್ತಿಗೆ, ಏಕತೆಗೆ ಯಾವುದೇ ಧಕ್ಕೆಯಾಗದಂತೆ ಬದುಕೋಣ ಎಂದರು.ಜಾತಿ, ಧರ್ಮ ಆಂತರೀಕ ಕಲಹಗಳನ್ನು ಬದಿಗೊತ್ತಿ ಎಲ್ಲ ವರ್ಗದ ಜನರು ಸಾಮರಸ್ಯದಿಂದ ಭಾರತೀಯರಾಗಿ ಬದುಕುವ ಮೂಲಕ ರಾಷ್ಟ್ರ ಪ್ರೇಮವನ್ನು ಎತ್ತಿಹಿಡಿಯೋಣ. ಕಂದಾಯ ಭವನದ ಎಲ್ಲ ಇಲಾಖಾ ಅಧಿಕಾರಿಗಳು ಸೇರಿ ರಾಷ್ಟ್ರೀಯ ಹಬ್ಬವನ್ನು ಆಚರಿಸಿ, ಹರ್ಘರ್ ತ್ರಿರಂಗಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಮೆರಗು ತಂದು ಕೊಟ್ಟಿದ್ದೀರಿ ಎಂದು ತಿಳಿಸಿದರು.
ಇದೇ ವೇಳೆ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಗಾಣಕಲ್ ನಟರಾಜು ಅವರು ಎಸ್ಎಸ್ಎಲ್ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರು., ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 15 ಸಾವಿರ ರು.ಗಳ ನಗದು ಪುರಸ್ಕಾರ ನೀಡಿ ಗೌರವಿಸಿದರು.ಧ್ವಜಾರೋಹಣ ಸಮಾರಂಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್. ಅಲ್ಪಸಂಖ್ಯಾತರ ಇಲಾಖೆ ಉಪನಿರ್ದೇಶಕ ಜಯಣ್ಣ, ಸಿಡಿಪಿಓ ಕಾಂತರಾಜು, ಮುಖ್ಯ ಗ್ರಂಥಾಲಯ ಅಧಿಕಾರಿ ಚನ್ನಕೇಶವ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಉಪ ನೊಂದಾಣಾಧಿಕಾರಿ, ಡಿಆರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.15ಕೆಆರ್ ಎಂಎನ್ 3.ಜೆಪಿಜಿ
ರಾಮನಗರದ ಕಂದಾಯ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಿದರು.