- ರಾಜ್ಯವ್ಯಾಪಿ ಕರೆ ಮೇರೆಗೆ ಯುಬಿಡಿಟಿ ಕಾಲೇಜಿನ ಸಿ, ಡಿ ಗ್ರೂಪ್ ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರ ಪತ್ರ ಚಳವಳಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಕನಿಷ್ಠ ವೇತನ ಜಾರಿಗಾಗಿ ಹೋರಾಟ ಸಮಿತಿ ಹಾಗೂ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜು ಸಿ ಮತ್ತು ಡಿ ಗ್ರೂಪ್ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯವ್ಯಾಪಿ ಕರೆಯ ಮೇರೆಗೆ ನಗರದ ಎಂಸಿ ಕಾಲನಿಯ ಬಿ ಬ್ಲಾಕ್ನ ಅಂಚೆ ಕಚೇರಿ ಎದುರು ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರು ಪತ್ರ ಚಳವಳಿ ನಡೆಸಿದರು.ನಗರದ ಎಂಸಿಸಿ ಬಿ ಬ್ಲಾಕ್ನ ಯುಬಿಡಿಟಿ ಕಾಲೇಜಿನ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಕಾಲೇಜಿನ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ನಂತರ ಅಲ್ಲಿಂದ ಅಂಚೆ ಕಚೇರಿಗೆ ತೆರಳಿ, ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಅಂಚೆ ಪತ್ರ ಪಡೆದು, ಮುಖ್ಯಮಂತ್ರಿಗೆ ಪತ್ರ ರವಾನಿಸಿದರು.
ಸುಮಾರು 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕನಿಷ್ಠ ವೇತನ ಪರಿಷ್ಕರಣೆ ಕಡೆಗೂ ಕಳೆದ ಮೇ 22ರಂದು ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಲ್ಲಿ ಸಂತಸ ಮೂಡಿಸಿತ್ತು. ಈ ನಿರ್ಧಾರಕ್ಕಾಗಿ ಕಾರ್ಮಿಕರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದರು. ಆದರೆ, ಪರಿಷ್ಕೃತ ವೇತನ ಜಾರಿಯನ್ನು ತಡೆಹಿಡಿದು, ಸಂಪುಟ ಉಪ ಸಮಿತಿ ರಚಿಸಿರುವ ಕ್ರಮದಿಂದಾಗಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಲ್ಲಿ ತೀವ್ರ ಆತಂಕ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಇಂದು ರಾಜ್ಯವ್ಯಾಪಿ ಪತ್ರ ಚಳವಳಿ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರಿಗೆ ಮನವಿ ಮಾಡುತ್ತಿದ್ದೇವೆ. ರಾಜ್ಯಾದ್ಯಂತ ಇದೇ ಬೇಡಿಕೆ ಮುಂದಿಟ್ಟುಕೊಂಡು ಪತ್ರ ಚಳವಳಿ ನಡೆಸಲಾಗುತ್ತಿದ್ದು, ರಾಜ್ಯ ಸರ್ಕಾರವು ತಕ್ಷಣವೇ ಸಕಾರಾತ್ಮಕ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡುವುದು, ವಿಳಂಬ ಧೋರಣೆ ಅನುಸರಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
- - -
ದಾವಣಗೆರೆಯಲ್ಲಿ ಸೋಮವಾರ ಪರಿಷ್ಕೃತ ಕನಿಷ್ಠಷ್ಟ ವೇತನ ಜಾರಿಗೆ ಒತ್ತಾಯಿಸಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜ್ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರು ಮುಖ್ಯಮಂತ್ರಿಗೆ ಮನವಿ ಮಾಡಿ, ಪತ್ರ ಚಳವಳಿ ನಡೆಸಿದರು.