ಪಶ್ಚಿಮ ಘಟ್ಟದ ಜನರಿಗೆ ತೊಂದರೆಯಾಗದಂತೆ ಸರ್ಕಾರಕ್ಕೆ ಪತ್ರ: ಸ್ವರೂಪ

KannadaprabhaNewsNetwork |  
Published : Sep 01, 2026, 03:00 AM IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಸ್ತೂರಿರಂಗನ್ ಕರಡು ಅಧಿಸೂಚನೆಯ ಬಗ್ಗೆ ಸಭೆ ನಡೆಯಿತು | Kannada Prabha

ಸಾರಾಂಶ

ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಕಾರ್ಯತಂಡ ನೀಡಿರುವ ಅಧ್ಯಯನ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿರುವ ಕರಡು ಅಧಿಸೂಚನೆಯ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭರವಸೆ ನೀಡಿದ್ದಾರೆ.

ಉಡುಪಿ: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಕಾರ್ಯತಂಡ ನೀಡಿರುವ ಅಧ್ಯಯನ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿರುವ ಕರಡು ಅಧಿಸೂಚನೆಯ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭರವಸೆ ನೀಡಿದ್ದಾರೆ.

ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಸರ ಸೂಕ್ಷ್ಮ ಕರಡು ಅಧಿಸೂಚನೆ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಡಂಚಿನ ಭಾಗದ ಜನರು ಕಸ್ತೂರಿ ರಂಗನ್ ವರದಿ ಜಾರಿಯಿಂದ ತಮ್ಮ ಜೀವನ ಹಾಗೂ ಜೀವನೋಪಾಯಕ್ಕೆ ತೊಂದರೆ ಉಂಟಾಗುತ್ತಿದೆ, ಅಭಿವೃದ್ಧಿ ಕಾರ್ಯಗಳಲ್ಲಿ ಹಿನ್ನಡೆಯಾಗುತ್ತದೆ ಎಂಬ ಆತಂಕಕ್ಕೊಳಗಾಗಿದ್ದಾರೆ. ಮುಖ್ಯವಾಗಿ ಮಲೆಕುಡಿಯ, ಕೊರಗ ಸೇರಿದಂತೆ ಮತ್ತಿತರ ಬುಡಕಟ್ಟು ಜನಾಂಗಗಳು ಗೊಂದಲಕ್ಕೊಳಗಾಗಿವೆ. ಆದರೆ, ಕಸ್ತೂರಿ ರಂಗನ್ ಕರಡು ವರದಿಯಲ್ಲಿ ಪಶ್ಚಿಮಘಟ್ಟದಲ್ಲಿ ಕಲ್ಲು ಕೋರೆ, ಕೈಗಾರಿಕೆ, ಬಹು ಮಹಡಿ ಕಟ್ಟಡಗಳು, ಟೌನ್‌ಶಿಪ್, ಥರ್ಮಲ್ ಪವರ್ ಪ್ಲಾಂಟ್ ಹಾಗೂ ಏರಿಯಾ ಡೆವಲಪ್‌ಮೆಂಟ್‌ ಪ್ರೊಜೆಕ್ಟ್‌ಗಳಿಗೆ ಮಾತ್ರ ನಿರ್ಬಂಧವಿದೆ. ಆದರೂ ಜನಪರ ಹಿತವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಕರಡು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಕಾರ್ಕಳದ 13 ಹಾಗೂ ಕುಂದಾಪುರದ 22 ಸೇರಿದಂತೆ ಒಟ್ಟು 35 ಹಳ್ಳಿಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡಲಿವೆ. ಈ ಪ್ರದೇಶಗಳ ಮಧ್ಯದಲ್ಲೂ ವಸತಿ ಪ್ರದೇಶವಿರುವುದರಿಂದ ಕೂಲಂಕಷವಾಗಿ ಪರಿಶೀಲಿಸಬೇಕಿದೆ ಎಂದರು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಕಸ್ತೂರಿ ರಂಗನ್ ಕರಡು ಅಧಿಸೂಚನೆಯನ್ನು ನಾವು ವಿರೋಧಿಸುತ್ತೇವೆ. ಜನರ ಪ್ರತಿರೋಧವನ್ನು ಸರ್ಕಾರದ ಗಮನಕ್ಕೆ ತರಬೇಕು. ಪರಿಸರ ಸೂಕ್ಷ್ಮ ವಲಯವು ವಸತಿ ಪ್ರದೇಶದಿಂದ ಹೊರಗಿರಬೇಕು. ಜಿಲ್ಲೆಯ 35 ಗ್ರಾಮಗಳ ಜನರ ಬದುಕಿಗೆ ತೊಂದರೆಯಾಗದ ರೀತಿಯಲ್ಲಿ ಸರಿಯಾದ ಭೌತಿಕ ಸರ್ವೆ ಮಾಡಿ, ವರದಿಯನ್ನು ಕಳುಹಿಸಬೇಕು ಎಂದು ಆಗ್ರಹಿಸಿದರು. ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಪರಿಸರ ಸೂಕ್ಷ್ಮ ಪ್ರದೇಶವು ಯಾವ ಗ್ರಾಮಗಳಲ್ಲಿ, ಯಾವ ಸರ್ವೆ ನಂಬರ್ ಒಳಗೊಂಡಿವೆ ಎಂಬ ನಿಖರ ಮಾಹಿತಿ ಜನರಿಗೆ ತಿಳಿಸಬೇಕು. ಕಂದಾಯ ಹಾಗೂ ಅರಣ್ಯ ಇಲಾಖೆಯು ಜಂಟಿ ಸರ್ವೆಯನ್ನು ಮಾಡಿ ಗಡಿ ಗುರುತಿಸಬೇಕು, ಪ್ರತಿ ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸಿ ಸರ್ಕಾರಕ್ಕೆ ವರದಿ ನೀಡಬೇಕು ಎಂದರು.

ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಕಾಡಂಚಿನ ಜನರಿಗೆ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅಥವಾ ವರದಿ ಜಾರಿ ಮಾಡಲು ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತರಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ. ಈ ಕಾರ್ಯವನ್ನು ತಪ್ಪದೆ ಮಾಡಬೇಕು ಎಂದರು.

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿದರು.

ಸಭೆಯಲ್ಲಿ ಡಿಎಫ್‌ಒ ರುಥ್ರೇನ್ ಪಿ., ಎಡಿಸಿ ಅಬೀದ್ ಗದ್ಯಾಳ್, ಎಎಸ್ಪಿ ಸುಧಾಕರ್ ನಾಯಕ್, ಸಹಾಯಕ ಕಮಿಷನರ್ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂಗಳ ಧಾರ್ಮಿಕ ಆಚರಣೆ ಮೇಲೆ ಅತಿಯಾದ ನಿಯಂತ್ರಣ ಬೇಡ: ಸಂಸದ ಕೋಟ
ಗ್ರಾಮೀಣ ಆರೋಗ್ಯ ಸೇವೆಗೆ ಕೇಂದ್ರ ಸರ್ಕಾರ ಆದ್ಯತೆ: ಯಶ್‌ಪಾಲ್ ಸುವರ್ಣ