ಮುಂಡರಗಿ: ಗ್ರಂಥಾಲಯಗಳು ಕೇವಲ ಪುಸ್ತಕಗಳ ಸಂಗ್ರಹಾಲಯಗಳಲ್ಲ, ಅವು ಜ್ಞಾನದ ಭಂಡಾರಗಳು. ಪ್ರತಿಯೊಬ್ಬ ವಿದ್ಯಾರ್ಥಿಯೂ ಗ್ರಂಥಾಲಯದ ಸದುಪಯೋಗ ಪಡೆದುಕೊಂಡು ಜ್ಞಾನ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಡಾ. ಅನ್ನದಾನೀಶ್ವರ ಸ್ವಾಮೀಜಿ ಕರೆ ನೀಡಿದರು.ಬುಧವಾರ ಪಟ್ಟಣದ ಕ.ರಾ. ಬೆಲ್ಲದ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯ ಮತ್ತು ಅರ್ಥಶಾಸ್ತ್ರ ಸ್ನಾತಕೊತ್ತರ ಅಧ್ಯಯನ ವಿಭಾಗಗಳ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಗ್ರಂಥ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಜನ್ಮದಿನೋತ್ಸವದ ಪ್ರಯುಕ್ತ ಆಯೋಜಿಸಿದ್ದ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಕಾಲೇಜಿನ ಗ್ರಂಥಾಲಯದಲ್ಲಿ ಪ್ರಸ್ತುತ 33 ಸಾವಿರಕ್ಕೂ ಹೆಚ್ಚು ಮೌಲ್ಯಯುತ ಗ್ರಂಥಗಳ ಸಂಗ್ರಹವಿದೆ. ಕಾಲೇಜು ಪ್ರಾರಂಭವಾದಾಗಿನಿಂದಲೂ ಗ್ರಂಥಾಲಯವನ್ನು ಸತತವಾಗಿ ಅಭಿವೃದ್ಧಿಪಡಿಸಿಕೊಂಡು ಬರಲಾಗಿದೆ ಎಂದರು.
ಕಾಲೇಜು ಮೇಲ್ವಿಚಾರಣಾ ಸಮೀತಿ ಕಾರ್ಯಾಧ್ಯಕ್ಷ ಪ್ರೊ. ಆರ್.ಎಲ್. ಪೊಲೀಸಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿರುವುದು ಕಳವಳಕಾರಿ ವಿಷಯ. ಮೊಬೈಲ್ ಬಳಕೆಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಪುಸ್ತಕಗಳ ಸಂಗ್ರಹಣೆ ಹಾಗೂ ಓದಿಗೆ ನೀಡಬೇಕು ಎಂದರು.
ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ಪುಸ್ತಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿ.ಎಫ್. ಗುಡದಪ್ಪನವರ, ಎಂ.ಜಿ. ಗಚ್ಚಣ್ಣವರ, ತಿಮ್ಮಪ್ಪ ದಂಡೀನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪ್ರಾ. ಡಾ. ಸಂತೋಷ ಹಿರೇಮಠ ಸ್ವಾಗತಿಸಿ, ಪ್ರೊ. ಲತಾ ಕಡ್ಡಿ ನಿರೂಪಿಸಿ, ಮಹಾಂತೇಶ ಹೊಸಕೇರಿಮಠ ವಂದಿಸಿದರು.