ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಗೋಪಿ ವೃತ್ತದ ಮಲ್ಲಿಕಾರ್ಜುನ ಚಿತ್ರಮಂದಿರದ ಸಮೀಪವಿರುವ ಸಸ್ಯಾಹಾರಿ ಫುಡ್ ಕೋರ್ಟ್ ಹಾಗೂ ಸವಾರ್ ಲೈನ್ ರಸ್ತೆಯಲ್ಲಿರುವ ಮಾಂಸಾಹಾರಿ ಫುಡ್ ಕೋರ್ಟ್ಗಳಿಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸಮಗ್ರ ತಪಾಸಣೆ ನಡೆಸಿದರು.
ನಿಯಮ ಉಲ್ಲಂಘಿಸಿದ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದ್ದು, ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು 15 ದಿನಗಳ ಗಡುವು ನೀಡಲಾಗಿದೆ. ನಿಗದಿತ ಗಡುವಿನೊಳಗೆ ನಿಯಮ ಪಾಲಿಸದಿದ್ದರೆ ಪರವಾನಗಿ ರದ್ದುಪಡಿಸುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದರು. ತಪಾಸಣೆ ವೇಳೆ ಬಹುತೇಕ ಮಳಿಗೆಗಳಲ್ಲಿ ಆಹಾರ ಸುರಕ್ಷತಾ ಪರವಾನಗಿ ಪತ್ರ ಪ್ರದರ್ಶಿಸದಿರುವುದು ಕಂಡುಬಂದಿದೆ. ಸಿಬ್ಬಂದಿಗೆ ಕೈತೊಳೆಯಲು ಕನಿಷ್ಠ ಸೋಪು ಮತ್ತು ಹ್ಯಾಂಡ್ವಾಶ್ ವ್ಯವಸ್ಥೆ ಇಲ್ಲದಿರುವುದನ್ನು ಕಂಡು ಉಪವಿಭಾಗಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಕುಡಿಯುವ ನೀರನ್ನು ಸ್ವಚ್ಛತೆಯಿಲ್ಲದ ಕೊಳಕು ಬಕೆಟ್ಗಳಲ್ಲಿ ಸಂಗ್ರಹಿಸಿರುವುದು ಹಾಗೂ ಜ್ಯೂಸ್ ತಯಾರಿಕೆಯಲ್ಲಿ ಶುದ್ಧ ನೀರಿನ ಬದಲಾಗಿ ಹೊರಗಡೆ ಎಲ್ಲೆಂದರಲ್ಲಿ ಬಳಸುವ ಐಸ್ ಗಡ್ಡೆಗಳನ್ನು ಬಳಸುತ್ತಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿ ವ್ಯಾಪಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿ ಕಡ್ಡಾಯವಾಗಿ ಕೈಗವಸು ಮತ್ತು ಹೇರ್ ಕ್ಯಾಪ್ ಬಳಸದಿರುವ ಬಗ್ಗೆಯೂ ಎಚ್ಚರಿಕೆ ನೀಡಲಾಯಿತು.
ಆಹಾರ ಸುರಕ್ಷತಾ ಗುಣಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ತಪಾಸಣೆ ವೇಳೆ ಕಂಡುಬಂದಿರುವ ಲೋಪದೋಷಗಳ ಕುರಿತ ಸಮಗ್ರ ವರದಿ ಸಿದ್ಧಪಡಿಸಿ ಮುಂದಿನ ಕಠಿಣ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದುರೆ ಎಂದು ಉಪವಿಭಾಗಾಧಿಕಾರಿ ಡಾ. ಮೈತ್ರಿ ಹೇಳಿದರು.