ಕನ್ನಡಪ್ರಭ ವಾರ್ತೆ ತುಮಕೂರುದುಡುಕಿನಿಂದ ತೆಗೆದುಕೊಳ್ಳುವ ತೀರ್ಮಾನಗಳು ಭವಿಷ್ಯವನ್ನು ಅತಂತ್ರಕ್ಕೆ ತಳ್ಳುತ್ತವೆ. ಸಿಡುಕಿನ ಸ್ವಭಾವಗಳು ಆತ್ಮಹತ್ಯೆಯಂತಹ ಪ್ರಚೋದನೆಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಜೀವನದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮಚಿತ್ತದಿಂದ ಧೈರ್ಯವಾಗಿ ಎದುರಿಸುವ ಶಕ್ತಿ ಬೆಳೆಸಿಕೊಂಡಾಗ ಆತ್ಮಹತ್ಯೆ ಪ್ರಯತ್ನಗಳಿಂದ ಹೊರಬರಲು ಸಾಧ್ಯ ಎಂದು ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ. ಲಲಿತಾ ಸಲಹೆ ನೀಡಿದರು.ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರ, ಅನನ್ಯ ಇನಿಸ್ಟಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವರ ಸಂಯುಕ್ತಾಶ್ರಯದಲ್ಲಿ ಅನನ್ಯ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಸಾಲ ಮಾಡಿ ಅದನ್ನು ತೀರಿಸಲಾಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಸಂಗಗಳು ಹೇಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆಯೋ ಹಾಗೆಯೇ ವಿದ್ಯಾರ್ಥಿಗಳು ಕಡಿಮೆ ಅಂಕಗಳು ಬಂದಾಗ, ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಗೆ ಶರಣಾಗುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ವಿದ್ಯಾರ್ಥಿ ಸಮೂಹ ಹೆಚ್ಚು ಎಚ್ಚರದಿಂದ ಇರಬೇಕು ಎಂದು ಕಿವಿಮಾತು ಹೇಳಿದರು.ವಿಶೇಷ ಉಪನ್ಯಾಸ ನೀಡಿದ ಆಪ್ತ ಸಮಾಲೋಚಕ ಸಿ.ಸಿ.ಪಾವಟೆ ಮಾತನಾಡಿ ನಮ್ಮಲ್ಲಿ ಬಹಳಷ್ಟು ಮಂದಿಗೆ ತಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ. ವಿದ್ಯಾರ್ಥಿಗಳಲ್ಲಿಯೂ ಇದೇ ಮನಸ್ಥಿತಿ ಇದೆ. ಇದರಿಂದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಬಂಧಗಳು ಬಿರುಕು ಕಾಣಿಸಿಕೊಳ್ಳುತ್ತವೆ. ತಪ್ಪುಗಳನ್ನು ಒಪ್ಪಿಕೊಳ್ಳುವ, ತಿದ್ದಿ ನಡೆಯುವ ಕಡೆಗೆ ಗಮನ ಹರಿಸಿದಾಗ ಸಮಸ್ಯೆಗಳಿಂದ ಮುಕ್ತಿ ಹೊಂದಲು ಸಾಧ್ಯವಿದೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಇರುತ್ತದೆ. ಆದರೆ ಆ ಪರಿಹಾರ ಕಂಡುಕೊಳ್ಳುವ ಮನಸ್ಸುಗಳು ಎಚ್ಚರವಾಗಿರಬೇಕು ಎಂದರು.
ಮಹಿಳಾ ಇಲಾಖೆ ಮಿಷನ್ ಶಕ್ತಿ ಯೋಜನೆಯ ಕೋ ಆರ್ಡಿನೇಟರ್ ರಶ್ಮಿ, ಅನನ್ಯ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಅನನ್ಯ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಘು, ವರದಕ್ಷಿಣೆ ವಿರೋಧಿ ವೇದಿಕೆಯ ಸಿ.ಎಲ್.ಸುನಂದಮ್ಮ, ಗಂಗಲಕ್ಷ್ಮಿ, ಸಾಂತ್ವನ ಕೇಂದ್ರದ ಪಾರ್ವತಮ್ಮ, ಯುವರಾಣಿ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕಿ ರಾಧಾಮಣಿ ಸ್ವಾಗತಿಸಿ, ಸುಮ ವಂದಿಸಿದರು. ಶ್ವೇತ ಕಾರ್ಯಕ್ರಮ ನಿರೂಪಿಸಿದರು.