ಕನ್ನಡಪ್ರಭ ವಾರ್ತೆ ಕಲಬುರಗಿ
ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕ-ಸಂಸದರು ಹಾಗೂ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಪುಟ ಸಭೆ ಕಲಬುರಗಿಯಲ್ಲಿ ನಡೆಯುತ್ತಿರುವುದರಿಂದ ಈ ಭಾಗದ ಪ್ರಸ್ತಾವನೆಗಳ ಅನುಮೋದನೆ ನೀಡಲು ಸರ್ಕಾರ ಉತ್ಸುಕವಾಗಿದೆ. ಪ್ರದೇಶದ ಅಭಿವೃದ್ಧಿಗೂ ಈ ಸಭೆ ಸುವರ್ಣಾವಕಾಶವಾಗಿದೆ ಎಂದರು.
ಮಂಗಳವಾರ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಜೊತೆ ಡಿಸಿ ಸರ್ಕಾರದಲ್ಲಿ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಚರ್ಚಿಸಿಲಿದ್ದಾರೆ. ಸಂಪುಟ ಸಭೆಯ ಗಾಂಭೀರ್ಯ ಅರಿತು ಕೂಡಲೆ ಇಲಾಖಾವಾರು ಆಯಾ ಅಧಿಕಾರಿಗಳು ಬಾಕಿ ಪ್ರಸ್ತಾವನೆ ಬಗ್ಗೆ ಮಾಹಿತಿ ನೀಡಿದಲ್ಲಿ ಅದನ್ನು ಸಚಿವ ಸಂಪುಟ ಮುಂದಿಟ್ಟು ಅನುಮೋದನೆ ಪಡೆಯಲು ಸರ್ವ ಪ್ರಯತ್ನ ಮಾಡಲಾಗುವುದು ಎಂದರು.ಶಾಸಕರು ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಪ್ರಸ್ತಾವನೆ ಕೊಟ್ಟಿದಲ್ಲಿ ಅದನ್ನು ಸಹ ಸರ್ಕಾರದ ಮುಂದಿಡಲಾಗುವುದು ಎಂದ ಸಚಿವರು, ಇಲಾಖಾವಾರು ಸರ್ಕಾರದಲ್ಲಿ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ಕೂಲಂಕುಷವಾಗಿ ಚರ್ಚಿಸಿ ಮಾಹಿತಿ ಪಡೆದರು.
ದಶಕಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಜನರ ನಿರೀಕ್ಷೆಯಂತೆ ಪ್ರದೇಶ ಅಶೋತ್ತರಗಳನ್ನು ಈಡೇರಿಸುವ ಪ್ರಮುಖ ಸಭೆ ಇದಾಗಿದೆ. ಸಿ.ಎಂ. ಸೇರಿ ಇಡೀ ಸಂಪುಟ ಸದಸ್ಯರು, ಹಿರಿಯ ಅಧಿಕಾರಿಗಳು ಸೇರಿ ಇಡೀ ಸರ್ಕಾರವೇ ಕಲಬುರಗಿಯತ್ತ ಬರುವುದರಿಂದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಬೇಕು. ಸಚಿವರು, ಹಿರಿಯ ಅಧಿಕಾರಿಗಳಿಗೆ ಶಿಷ್ಟಾಚಾರದಂತೆ ಸರಿಯಾಗಿ ಉಪಚಾರ ಮಾಡಬೇಕು ಎಂದು ಸೂಚಿಸಿದರು.
ಸೆ.15 ರಿಂದ 17ರ ವರೆಗೆ ನಗರದಾದ್ಯಂತ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಪೊಲೀಸ್ ಪರೇಡ್ ಮೈದಾನದಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.