ಗದಗ: ಯುವಜನಾಂಗ ವಚನ ಸಾಹಿತ್ಯದ ತತ್ವ ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ,ದಾಸೋಹ ಸಿದ್ಧಾಂತಗಳಡಿ ನವ ಸಮಾಜ ನಿರ್ಮಾಣವಾಗಬೇಕು ಎಂದು ತೋಂಟದಾರ್ಯ ಸಂಸ್ಥಾನಮಠದ ಜ.ಡಾ.ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ಅವರು ನಗರದ ಶ್ರೀಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾಡಳಿತ,ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ. ಫ.ಗು. ಹಳಕಟ್ಟಿ ಜನ್ಮದಿನದ ನಿಮಿತ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.ಸಂಶೋಧಕ, ಸಾಹಿತ್ಯ ಪ್ರಚಾರಕ ಡಾ.ಫ.ಗು.ಹಳಕಟ್ಟಿಯವರು ವಕೀಲ ವೃತ್ತಿ ನಿರ್ವಹಿಸುತ್ತಿದ್ದರು.ಅವರ ವಚನ ಸಾಹಿತ್ಯದ ಮೇಲಿನ ಕಾಳಜಿ ಇಡೀ ರಾಜ್ಯಾದ್ಯಂತ ಅಲೆದಾಡಿ 12ನೇ ಶತಮಾನದ ಅನೇಕ ವಚನಗಳನ್ನು ಸಂಗ್ರಹಿಸಿ ವಚನ ಸಾಹಿತ್ಯವನ್ನು ಶಾಶ್ವತವಾಗಿ ಉಳಿಸುವಲ್ಲಿ ಅವರ ಪಾತ್ರ ಮಹತ್ತರವಾದದ್ದು.ಬ್ರಿಟಿಷರ ಕಾಲದಲ್ಲಿ ಕನ್ನಡದ ಅತ್ಯಮೂಲ್ಯವಚನ ಸಾಹಿತ್ಯ ಪ್ರಕಟಿಸುವುದು ಸುಲಭ ಕಾರ್ಯವಾಗಿದ್ದಿಲ್ಲ.ಅವರಿಗೆ ಎದುರಾದ ಅಡೆತಡೆ ಎದುರಿಸಿ ಸಂಗ್ರಹಿಸಿದ ವಚನಗಳನ್ನು ಮುದ್ರಿಸಲು ತಮ್ಮ ಸ್ವಂತ ಮನೆ ಮಾರಿರುವುದು ಅವರ ದೃಢ ಇಚ್ಛಾಶಕ್ತಿ ಎಂತಹದು ಎಂದು ತಿಳಿಯುತ್ತದೆ ಎಂದರು.
ವೈಯಕ್ತಿಕ ಜೀವನದಲ್ಲಿ ಹಲವಾರು ತೊಂದರೆಗಳನ್ನು ಲೆಕ್ಕಿಸದೇ ವಚನಗಳನ್ನು ಸಂಗ್ರಹಿಸುವಲ್ಲಿ ನಿರತರಾಗಿ ಜನಸಾಮಾನ್ಯರ ಜೀವನ ಬದಲಾಯಿಸುವಲ್ಲಿ ಮಹತ್ತರ ಪಾತ್ರ ಹೊಂದಿದ್ದಾರೆ. ಅವರ ಉನ್ನತ ವ್ಯಕ್ತಿತ್ವ ಮತ್ತು ವಚನ ಸಾಹಿತ್ಯದ ಮೇಲಿರುವ ಶ್ರದ್ಧೆ ಗಮನಿಸಿದ ಮಠಾಧೀಶರು ಫ.ಗು ಹಳಕಟ್ಟಿಯವರನ್ನು ಒಬ್ಬ ಶರಣರಂತೆ ಭಾವಿಸಿ ತಮ್ಮ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಿದ್ದಾರೆ ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ.ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯವು ಜನ ಸಾಮಾನ್ಯರ ಜೀವನ ಕಟ್ಟುವಲ್ಲಿ ಮಹತ್ತರ ಪಾತ್ರ ವಹಿಸದೆ ಇಂತಹ ವಚನಗಳನ್ನು ಶ್ರಮವಹಿಸಿ ಸಂಗ್ರಹಿಸಿದ ಫ.ಗು. ಹಳಕಟ್ಟಿಯವರ ಕಾರ್ಯ ಶ್ಲಾಘನೀಯವಾದದ್ದು, ಅರ್ಥಪೂರ್ಣ, ಅತ್ಯಮೂಲ್ಯ ವಚನ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ವಿಜಯಪುರದ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್.ಮದಬಾವಿ ಉಪನ್ಯಾಸಕರಾಗಿ ಆಗಮಿಸಿ ಮಾತನಾಡಿ, ಡಾ.ಫ.ಗು.ಹಳಕಟ್ಟಿ ಧಾರವಾಡದಲ್ಲಿ ಹುಟ್ಟಿ ವಿದ್ಯಾಭ್ಯಾಸ ಮುಗಿಸಿದ ನಂತರ ವಿಜಯಪುರದಲ್ಲಿ ತಮ್ಮ ವಕೀಲ ವೃತ್ತಿ ಪ್ರಾರಂಭಿಸಿದರು, ವಚನ ಸಾಹಿತ್ಯದ ಮೇಲಿನ ಅಪಾರ ಆಸಕ್ತಿಯಿಂದ ತಾಳೆಗರಿಯ ಪ್ರಾಚೀನ ಗ್ರಂಥ ಸಂಪಾದಿಸಲು ಪ್ರಾರಂಭಿಸಿ ವಚನ ಸಾಹಿತ್ಯ ಉಳಿಸಲು ಪಣತೊಟ್ಟರು. 1920ರ ಸಮಾರಿಗೆ ಸಾವಿರಾರು ಗ್ರಂಥಗಳ ಸಂಪಾದನೆ ಜತೆಗೆ ವಚನ ಸಂಗ್ರಹ ಮಾಡಿ ಸರ್ಕಾರ ಯುಜಿಸಿ ಸಾರ್ವಜನಿಕ ಸಂಸ್ಥೆ ಗಳ ನೆರವಿಲ್ಲದೆ ಹಲವಾರು ವಚನಕಾರರನ್ನು ಬೆಳಕಿಗೆ ತರುವಲ್ಲಿ ಮಾಡಿದ ಮಹತ್ಕಾರ್ಯ ಇತಿಹಾಸ ನೆನಪಿಡುವಂತದಾಗಿದೆ ಎಂದು ಫ.ಗು.ಹಳಕಟ್ಟಿಯವರ ಜೀವನ ಮತ್ತು ಸಾಧನೆಯ ಪ್ರಮುಖ ವಿಷಯ ವಿವರಿಸಿದರು.ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಪಂ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ ಸೇರಿದಂತೆ ಗಣ್ಯರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ.ಬಿ ಸ್ವಾಗತಿಸಿದರು. ಮೃತ್ಯುಂಜಯ ಹಿರೇಮಠ ಹಾಗೂ ತಂಡದವರು ವಚನ ಸಂಗೀತ ಪ್ರಸ್ತುತ ಪಡಿಸಿದರು. ಪ್ರೋ. ಆರ್.ಬಿ.ಚಿನಿವಾಲರ ನಿರೂಪಿಸಿದರು.