ಹಿರಿಯೂರು: ವಿವಿ ಸಾಗರ ಜಲಾಶಯದ ಎಡನಾಲೆಯಿಂದ ಅನಧಿಕೃತವಾಗಿ ನೀರು ಹರಿಸಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ಆರೋಪಿಸಿದ್ದಾರೆ.
ಇನ್ನು, ತಾಲೂಕಿನ ವಾಣಿವಿಲಾಸ ಜಲಾಶಯದಿಂದ ಈಗಾಗಲೇ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳಿಗೆ ನದಿಪಾತ್ರದ ಮೂಲಕ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಸುಮಾರು 5 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ದಿನಾಂಕ 21-3-2024 ರಿಂದ 9-4-2024 ರವರೆಗೆ ಹರಿಸಲಾಗಿದೆ. ಇನ್ನೂ 80 ಕಿ.ಮೀ. ನೀರು ಹರಿಯುವುದರಿಂದ ಮೊಳಕಾಲ್ಮುರು ತಾಲೂಕು ದಾಟಿ ಆಂಧ್ರಕ್ಕೆ ಹರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಆದರೆ ನಮ್ಮ ತಾಲೂಕಿನ ಕೆಲವು ಗ್ರಾಮಗಳ ಕೆರೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಸರ್ಕಾರದ ಆದೇಶ ಬೇಕಿದೆ ಎನ್ನಲಾಗಿದೆ. ಬೇರೆ ತಾಲೂಕುಗಳಿಗೆ ನೀರು ಹರಿಸುವಾಗ ಯಾವುದೇ ಆದೇಶ ವಿಲ್ಲದೆ ಹೆಚ್ಚುವರಿ ನೀರನ್ನು ಹರಿಸಲಾಗಿದ್ದು, ಇದೀಗ ಕೇವಲ 200 ಕ್ಯೂಸೆಕ್ಸ್ ನೀರು ಹರಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಹಿರಿಯೂರು ತಾಲೂಕಿನ ಎಲ್ಲಾ ಭಾಗದ ರೈತರು ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸಬೇಕು ಎಂದು ಅನೇಕ ರೀತಿಯ ಹೋರಾಟ ಚಳವಳಿಗಳನ್ನು ನಡೆಸಿದ್ದರು. ಆದರೆ ಹೋರಾಟ ನಡೆಸಿದ ರೈತರಿಗೆ ನೀರು ಕೊಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ದುರಂತವೆಂದರೆ ವಾಣಿವಿಲಾಸ ಜಲಾಶಯದ ಬಗ್ಗೆ ಯಾವುದೇ ಹೋರಾಟ ಮಾಡದೆ ತುಟಿ ಪಿಟಿಕ್ ಎನ್ನದೇ ಇರುವ ರೈತರ ಹೆಸರಿನಲ್ಲಿ ಸಾವಿರಾರು ಕ್ಯೂಸೆಕ್ಸ್ ನೀರನ್ನು ನದಿ ಮೂಲಕ ಆಂಧ್ರಕ್ಕೆ ಹರಿಸಲಾಗುತ್ತದೆ. ಅಧಿಕಾರಿಗಳು ಸಂವಿಧಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೋ ಅಥವಾ ಯಾವುದೋ ರಾಜಕಾರಣಿಗಳಿಗೆ ಅಥವಾ ದೊಡ್ಡ ದೊಡ್ಡ ಕುಳಗಳಿಗೆ ಮಣೆ ಹಾಕುತ್ತಾರೋ ಎಂಬ ಯಕ್ಷಪ್ರಶ್ನೆ ಉದ್ಭವಿಸಿದೆ. ಇದು ಹೀಗೆಯೇ ಮುಂದುವರೆದರೆ ಕಾನೂನು ಕಾಯಿದೆಗಳನ್ನು ಗಾಳಿಗೆ ತೂರಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ವಿರುದ್ಧ ರಾಜ್ಯ ಮಟ್ಟದ ಚಳವಳಿಯನ್ನು ಹಮ್ಮಿಕೊಂಡು ಅವರನ್ನು ಅಮಾನತುಗೊಳಿಸುವವರೆಗೂ ನಿರಂತರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಹೇಳಿದ್ದಾರೆ.