ಸ್ಥಳೀಯ ಸಂಸ್ಥೆ ಚುನಾವಣೆ: ಏಕಾಂಗಿ ಸ್ಪರ್ಧೆಗೆ ರೈತ ಸಂಘ ತೀರ್ಮಾನ

KannadaprabhaNewsNetwork |  
Published : Nov 04, 2025, 12:15 AM IST
3ಕೆಎಂಎನ್ ಡಿ18 | Kannada Prabha

ಸಾರಾಂಶ

ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಬೇಕಾದರೆ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಚುನಾವಣೆಗಳಲ್ಲಿ ರೈತ ಸಂಘ ಏಕಾಂಗಿಯಾಗಿ ಸ್ಪರ್ಧಿಸುವುದು ಅನಿವಾರ್ಯ. ಚುನಾವಣೆಗೆ ಪೂರ್ವಭಾವಿಯಾಗಿ ರೈತ ಸಂಘದ ಪದಾಧಿಕಾರಿಗಳ ಸಮಿತಿ ವಿಸರ್ಜನೆ ಮಾಡುವ ಮೂಲಕ ಹೊಸ ಸಮಿತಿ ರಚನೆಗೆ ಸಮ್ಮತಿ.

ಕನ್ನಡಪ್ರಭ ವಾರ್ತೆ ಮದ್ದೂರು

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ರೈತ ಸಂಘ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲು ಸೋಮವಾರ ನಡೆದ ಸಂಘದ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ಗೌರವಾಧ್ಯಕ್ಷ ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

ರೈತರ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ನೀಡಿದ ಭರವಸೆಯಂತೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಲೂಟಿ ರಾಜಕಾರಣದಲ್ಲಿ ತೊಡಗಿವೆ ಎಂದು ಕಾರ್ಯಕರ್ತರು ಸಭೆಯಲ್ಲಿ ಗಂಭೀರ ಆರೋಪ ಮಾಡಿದರು.

ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಬೇಕಾದರೆ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಚುನಾವಣೆಗಳಲ್ಲಿ ರೈತ ಸಂಘ ಏಕಾಂಗಿಯಾಗಿ ಸ್ಪರ್ಧಿಸುವುದು ಅನಿವಾರ್ಯ ಎಂದು ಕಾರ್ಯಕರ್ತರು ಹಕ್ಕೊತ್ತಾಯ ಮಂಡಿಸಿದರು. ಚುನಾವಣೆಗೆ ಪೂರ್ವಭಾವಿಯಾಗಿ ರೈತ ಸಂಘದ ಪದಾಧಿಕಾರಿಗಳ ಸಮಿತಿಯನ್ನು ವಿಸರ್ಜನೆ ಮಾಡುವ ಮೂಲಕ ಹೊಸ ಸಮಿತಿ ರಚನೆ ಮಾಡುವುದಕ್ಕೆ ಮುಖಂಡರು ಮತ್ತು ಕಾರ್ಯಕರ್ತರು ಸಮ್ಮತಿ ಸೂಚಿಸಿದರು.

ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಸೋಮೇಶ್ವರ ಪರ್ಟಿಲೈಸರ್ಸ್ ರಸಗೊಬ್ಬರ ಕಾರ್ಖಾನೆ ಮೇಲೆ ಕಳೆದ ಅ. 28ರಂದು ಕೃಷಿ ಇಲಾಖೆ ಜಾಗೃತ ದಳದ ಅಧಿಕಾರಿಗಳು ದಾಳಿ ನಡೆಸಿ 147 ಟನ್ ರಸಗೊಬ್ಬರ ಜಪ್ತಿ ಪ್ರಕರಣ ಸಂಬಂಧ ಕಾರ್ಖಾನೆ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ರೈತ ಕಾರ್ಯಕರ್ತರು ಪ್ರವಾಸಿ ಮಂದಿರದ ಆವರಣದಲ್ಲಿ ಕೃಷಿ ಅಧಿಕಾರಿಗಳ ಎದುರೇ ಪ್ರತಿಭಟನೆ ನಡೆಸಿ, ಪ್ರಕರಣದ ಸಂಬಂಧ ಕುಲಂಕುಷ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಸಭೆಯಲ್ಲಿ ರೈತ ಮುಖಂಡರಾದ ಬೋರಾಪುರ ಶಂಕರೇಗೌಡ, ಜಿ.ಎ.ಶಂಕರ್, ಲಿಂಗಪ್ಪ ಜಿ.ಶೆಟ್ಟಿಹಳ್ಳಿ ರವಿಕುಮಾರ್, ವಿನೋದ್ ಬಾಬು, ವರದರಾಜು, ಗೊಲ್ಲರದೊಡ್ಡಿ ಅಶೋಕ, ಮುಟ್ಟೇನಹಳ್ಳಿ ವೆಂಕಟೇಶ್, ರಘು, ಡಿ.ಕೆ.ಚಂದ್ರು ಮತ್ತಿತರರು ಭಾಗವಹಿಸಿದ್ದರು.ರಸಗೊಬ್ಬರ ಜಪ್ತಿ ಪ್ರಕರಣ ತನಿಖೆ ಪ್ರಗತಿಯಲ್ಲಿ: ಅಶೋಕ್

ಮದ್ದೂರು: ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಸೋಮೇಶ್ವರ ಫರ್ಟಿಲೈಸರ್ ಕಾರ್ಖಾನೆ ಮೇಲೆ ಕೃಷಿ ಇಲಾಖೆ ಜಾಗೃತ ದಳದ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರ ಜಪ್ತಿ ಪ್ರಕರಣದ ತನಿಖೆ ಕಾರ್ಯ ಪ್ರಗತಿಯಲ್ಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೋಮವಾರ ಹೇಳಿದರು.

ಪ್ರಕರಣ ಸಂಬಂಧ ರೈತ ಸಂಘದ ಕಾರ್ಯಕರ್ತರು ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಅರಿತ ಜಂಟಿ ನಿರ್ದೇಶಕ ಅಶೋಕ್ ಸಹಾಯಕ ಕೃಷಿ ನಿರ್ದೇಶಕಿ ಎಚ್. ಜಿ.ಪ್ರತಿಭಾ ಅವರೊಂದಿಗೆ ಪ್ರವಾಸಿ ಮಂದಿರಕ್ಕೆ ತೆರಳಿ ರೈತ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.

ಇಲಾಖೆಯ ಜಾಗೃತದಳದ ಅಧಿಕಾರಿಗಳು ಜಪ್ತಿ ವೇಳೆ ಐಪಿಎಲ್ ಕಂಪನಿಯ 147 ಟನ್ ಎನ್. ಪಿ.ಕೆ.ಕಾಂಪ್ಲೆಕ್ಸ್ ರಸ ಗೊಬ್ಬರ ಲೇಬಲ್ ಇರುವ 64,750 ದೊರೆತಿರುವುದು ರಸಗೊಬ್ಬರ ನಿಯಂತ್ರಣ ಆದೇಶ 1985 ರನ್ವಯ ಹಾಗೂ ನಿಯಮ ಉಲ್ಲಂಘನೆ ಅಡಿಯಲ್ಲಿ ಜಪ್ತಿ ಮಾಡಲಾಗಿದೆ ಎಂದು ವಿವರಿಸಿದರು.

ಜಪ್ತಿ ಮಾಡಲಾದ ರಸಗೊಬ್ಬರಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ಅಂತಿಮ ವರದಿ ಬಂದ ನಂತರ ಸೋಮೇಶ್ವರ ಫರ್ಟಿಲೈಸರ್ಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಂಟಿ ನಿರ್ದೇಶಕ ಅಶೋಕ್ ಭರವಸೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಂಧ್ರದ ಗಡಿ ಕನ್ನಡಿಗರಿಗೆ ಶಿಕ್ಷಣ, ಉದ್ಯೋಗದಲ್ಲಿ ಶೇ.5 ಮೀಸಲಾತಿಗೆ ನೀಡಲಿ: ನಿಷ್ಠಿ ರುದ್ರಪ್ಪ
ದಾಸೋಹದಿಂದ ಸಾರ್ಥಕ ಜೀವನ ಸಾಧ್ಯ: ಓಂಕಾರ ಶಿವಾಚಾರ್ಯ ಶ್ರೀ