ರಾಣಿಬೆನ್ನೂರು: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಹಿತದೃಷ್ಟಿಯಿಂದ ಹಾವೇರಿ ಜಿಲ್ಲೆಗೆ ಸ್ಥಳೀಯ ಶಾಸಕರನ್ನೇ ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ಗೆ ವಿನಂತಿಯ ಪೂರ್ವಕ ಒತ್ತಾಯಿಸಲಾಗಿದೆ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ತಾಲೂಕಿನ ಬೆನಕನಕೊಂಡ ಗ್ರಾಮದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಹೊರಗಿನವರನ್ನೇ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುತ್ತಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಜತೆಗೆ ಅವಮಾನವೂ ಆಗುತ್ತಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿನ ಒಬ್ಬರನ್ನು ಸಚಿವರನ್ನಾಗಿ ಮಾಡಿದರೆ ಜಿಲ್ಲೆಯ ಸಮಸ್ಯೆಗಳನ್ನು ಅರಿತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದರು. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಯ ಇಬ್ಬರು ಶಾಸಕರು ಸಚಿವರಾಗಿದ್ದು, ಒಬ್ಬರು ಮುಖ್ಯಮಂತ್ರಿಯಾಗಿದ್ದನ್ನು ನೆನಪಿಸಿಕೊಂಡ ಶಿವಣ್ಣನವರು, ಮುಂಬರುವ ದಿನಮಾನಗಳಲ್ಲಿ ಹಾವೇರಿ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಲೇಬೇಕು. ಆದ್ದರಿಂದ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲಾವಾರು, ಸಾಮಾಜಿಕ ನ್ಯಾಯ, ಹಿರಿಯರು, ಅರ್ಹತೆ, ಅಳತೆ ಮಾಡಿ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು. ನಗರದ ಹೊರವಲಯದ ಮೆಗಾ ಮಾರುಕಟ್ಟೆಯಲ್ಲಿ ವರ್ತಕರಿಗೆ ನಿವೇಶನ ಹಂಚಿಕೆಯ ಕುರಿತು ಏನೂ ತೊಂದರೆ ಇಲ್ಲ. ಬ್ಯಾಡಗಿಯ ವರ್ತಕರು ಮೆಣಸಿನಕಾಯಿ ವ್ಯಾಪಾರದ ಜತೆಗೆ ಇತರ ವ್ಯಾಪಾರ ಮಾಡಲು ನಮ್ಮದೇನೂ ಅಭ್ಯಂತರವಿಲ್ಲ. ರಾಣಿಬೆನ್ನೂರು ಶಾಸಕರು ಮತ್ತು ನನ್ನ ಮಧ್ಯೆ ಭಿನ್ನಾಭಿಪ್ರಾಯ ಇದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಈಗಾಗಲೇ ಇಲ್ಲಿ ನಿವೇಶನ ಹಂಚಿಕೆ ಮಾಡಲಾಗಿದ್ದು, ಇದು ಗುಡ್ಡದಅನ್ವೇರಿ ಗ್ರಾಪಂ ವ್ಯಾಪ್ತಿಗೆ ಒಳಪಡುವುದರಿಂದ ನೋಂದಣಿ ಮಾಡಲು ಇ- ಸ್ವತ್ತಿನ ತೊಂದರೆ ಉಂಟಾಗಿದೆ. ಈ ಕುರಿತು ಇಬ್ಬರು ಶಾಸಕರು ಸೇರಿಕೊಂಡು ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು. ಬ್ಯಾಡಗಿಯಲ್ಲಿ ಚಿಲ್ಲಿ ಪಾರ್ಕ್ ನಿರ್ಮಾಣ ಮಾಡುವ ಕುರಿತು ಈ ಹಿಂದೆ ಮುಖ್ಯಮಂತ್ರಿಗಳಲ್ಲಿ ವಿನಂತಿಸಿಕೊಳ್ಳಲಾಗಿತ್ತು. ಕಾರಣಾಂತರಗಳಿಂದ ಅದು ಬಜೆಟ್ನಲ್ಲಿ ಬಾರದೆ ಇರುವುದು ನೋವುಂಟು ಮಾಡಿದೆ. ಈ ಕುರಿತು ಮತ್ತೊಮ್ಮೆ ಪರಿಶೀಲಿಸಿ ಚಿಲ್ಲಿ ಪಾರ್ಕ್ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.