ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 63,372 ಪ್ರಕರಣಗಳಲ್ಲಿ 46,832 ಪ್ರಕರಣಗಳು ಇತ್ಯರ್ಥಗೊಂಡಿವೆ. ₹36,34,51,746 ಮೊತ್ತದ ರಾಜೀಯಾಗಿದೆ. ಆರು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜೀ ಮಾಡಿಕೊಂಡಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ. ಸದಾನಂದಸ್ವಾಮಿ ತಿಳಿಸಿದ್ದಾರೆ.ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 8,052 ಪ್ರಕರಣಗಳ ಪೈಕಿ 5,423 ಪ್ರಕರಣಗಳು ಇತ್ಯರ್ಥಗೊಂಡಿವೆ. ₹24,28,50,865 ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 55,320 ಪ್ರಕರಣಗಳಲ್ಲಿ 41,409 ಪ್ರಕರಣಗಳು ಇತ್ಯರ್ಥಗೊಂಡಿದ್ದು, ₹12,06,00,881 ಮೊತ್ತದ ರಾಜೀಯಾಗಿದೆ.
ಬ್ಯಾಡಗಿ:
ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ಡಿ. 14ರಂದು ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ₹.1.96 ಕೋಟಿಗೂ ಅಧಿಕ ಮೊತ್ತದ ಒಟ್ಟು 2910 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡವು.ಈ ಕುರಿತು ಪ್ರಕಟಣೆ ನೀಡಿರುವ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಅಮೊಲ್ ಜೆ. ಹಿರಿಕುಡೆ ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗ ಸೇರಿದಂತೆ ಬಾಕಿಯಿದ್ದ ಬ್ಯಾಂಕ್ ವಸೂಲಾತಿ ಪ್ರಕರಣ, ಚೆಕ್ ಬೌನ್ಸ್, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹ ಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯ ಪೂರ್ವಸಾಲ ವಸೂಲಾತಿ, ಪ್ರಕರಣ ಸೇರಿದಂತೆ ರಾಜೀ ಸಂಧಾನದ ಒಟ್ಟು 1.96.89.842 ಮೊತ್ತದ ಪ್ರಕರಣ ಇತ್ಯರ್ಥಗೊಳಿಸಲಾಯಿತು.2910 ಪ್ರಕರಣ ಇತ್ಯರ್ಥ
ಹಿರಿಯ ದಿವಾಣಿ ನ್ಯಾಯಾಲಯದಲ್ಲಿನ 252 ಹಾಗೂ ವ್ಯಾಜ್ಯಪೂರ್ವ 1211 ಸೇರಿದಂತೆ ಒಟ್ಟು 1463, ಕಿರಿಯ ದಿವಾಣಿ ನ್ಯಾಯಾಲಯದಲ್ಲಿನ 235 ಹಾಗೂ ವ್ಯಾಜ್ಯಪೂರ್ವ 1212 ಸೇರಿದಂತೆ ಒಟ್ಟು 1447 ಪ್ರಕರಣಗಳು ಇತ್ಯರ್ಥಗೊಂಡಿವೆ. ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಜೆ. ಹಿರಿಕುಡೆ ಹಾಗೂ ಕಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಸೇರಿದಂತೆ ಹಿರಿಯ ಕಿರಿಯ ವಕೀಲರು ಹಾಗೂ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಮತ್ತು ಪಕ್ಷಗಾರರು ಉಪಸ್ಥಿತರಿದ್ದರು.