ಚಳ್ಳಕೆರೆ: ಚುನಾವಣಾ ಆಯೋಗ ಲೋಕಸಭೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿ, ರಾಷ್ಟ್ರದಲ್ಲಿ ಒಟ್ಟು ಏಳು ಹಂತಗಳ ಚುನಾವಣೆಯಲ್ಲಿ 2ನೇ ಹಂತದಲ್ಲೇ ಚಿತ್ರದುರ್ಗ ಲೋಕಸಭಾ ಚುನಾವಣೆ ನಡೆಯಲಿದೆ. ಏ.26ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಬಿ.ಆನಂದ್ ಚುನಾವಣೆಗಾಗಿ ನಿಯೋಜನೆಗೊಂಡ ವಿವಿಧ ವಿಭಾಗಗಳ ಅಧಿಕಾರಿಗಳ ತುರ್ತು ಸಭೆ ನಡೆಸಿದರು.
ಮತಗಟ್ಟೆ ಕೇಂದ್ರಕ್ಕೆ ಭೇಟಿ: ನಗರದ ಹೊರವಲಯದ ಕಾಟಪ್ಪನಹಟ್ಟಿ, ಚಿತ್ರಯ್ಯನಹಟ್ಟಿ ಬೂತ್ಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣಾ ಆಯೋಗ ನಿರ್ದೇಶನ ನೀಡಿದಂತೆ ಸಂಬಂಧಪಟ್ಟ ಅಧಿಕಾರಿಗಳು ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಮತದಾನ ಶಾಂತಿ, ಸುವ್ಯವಸ್ಥಿತವಾಗಿ ನಡೆಯಲು ಅಗತ್ಯಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆ ನಿರ್ದೇಶನ ನೀಡಲಾಗಿದೆ. ಮತಗಟ್ಟೆ ಕೇಂದ್ರಗಳಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದರು.
ತಹಸೀಲ್ದಾರ್ ರೇಹಾನ್ ಪಾಷ, ಠಾಣಾ ಇನ್ಸ್ಪೆಕ್ಟರ್ ಕೆ.ಕುಮಾರ್, ಚುನಾವಣಾ ಶಿರಸ್ತೇದಾರ್ ಹಸೀನಾ ಭಾನು, ಶ್ರೀಧರ, ಓಬಳೇಶ್, ಕಂದಾಯಾಧಿಕಾರಿ ಲಿಂಗೇಗೌಡ, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಇದ್ದರು.