ಕನ್ನಡಪ್ರಭ ವಾರ್ತೆ ಕಾರ್ಕಳಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ರಾಷ್ಟ್ರ ವಿರೋಧಿಗಳ ಸ್ಪರ್ಧೆಯಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಅವರು ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ನಡೆದ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಬಡವರಿಗೆ ನೀಡಲು ಕೇಂದ್ರ ಸರ್ಕಾರ ಅಕ್ಕಿ ನೀಡುತಿಲ್ಲ ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯರವರು ಸುಳ್ಳು ಹೇಳಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ತಿಂಗಳಿಗೆ 22 ಲಕ್ಷ ಕ್ವಿಂಟಾಲ್ ಅಕ್ಕಿಯನ್ನು ಕೇಂದ್ರ ಸರ್ಕಾರವು ರಾಜ್ಯದ ಬಡವರಿಗೆ ಹಂಚುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಒಂದು ವರ್ಷದಲ್ಲಿ 9 ಮೀಟರ್ ರಸ್ತೆ, ಒಂದು ಅಂಗನವಾಡಿಯೂ ನಿರ್ಮಾಣ ಮಾಡಿಲ್ಲ. ಸಂಧ್ಯಾ ಸುರಕ್ಷಾ, ವಿಧವಾ ವೇತನ ಪಿಂಚಣಿಯನ್ನು ರಾಜ್ಯ ಸರ್ಕಾರವು ನಿಲ್ಲಿಸಿದೆ. ನೂರು ಸುಳ್ಳು ಹೇಳಿ ಒಂದು ಸತ್ಯ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಗೆದ್ದರೆ ಗ್ಯಾರಂಟಿಗೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡು ಬರುತ್ತಿದೆ ಎಂದು ಹೇಳಿದರು.ಹಿರಿಯ ಬಿಜೆಪಿ ಮುಖಂಡ ಬೋಳ ಪ್ರಭಾಕರ್ ಕಾಮತ್, ಕಚೇರಿ ಉದ್ಘಾಟಿಸಿ ಶುಭಹಾರೈಸಿದರು.ಹಿರಿಯ ಮುಖಂಡ ಎಂ.ಕೆ. ವಿಜಯಕುಮಾರ್ ಮಾತನಾಡಿ, ಐವತ್ತು ವರ್ಷಗಳ ಕಾಂಗ್ರೆಸ್ ಪಕ್ಷಕ್ಕೆ ಕಾಲ ಶುಕ್ಲಪಕ್ಷವಾಗಿದ್ದು, ಮುಂದಿನ ಐವತ್ತು ವರ್ಷ ಬಿಜೆಪಿಯು ಸುಭಿಕ್ಷವಾಗಿ ರಾಷ್ಟ್ರದಲ್ಲಿ ಆಡಳಿತ ಮಾಡಲಿದೆ ಎಂದರು.ಸಭೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಸಂಚಾಲಕ ಹಾಗೂ ಶಾಸಕ ವಿ.ಸುನಿಲ್ ಕುಮಾರ್, ಮಾಜಿ ಮಂಡಲ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಚುನಾವಣಾ ಪ್ರಭಾರಿ ಶ್ಯಾಮಲ ಕುಂದಾರ್, ರೇಶ್ಮಾ ಉದಯ ಶೆಟ್ಟಿ, ಕೆ.ಪಿ. ಶೆಣೈ ಉಪಸ್ಥಿತರಿದ್ದರು. ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಸ್ವಾಗತಿಸಿದರು. ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.