ಲೋಕಸಭೆ ಚುನಾವಣೆ ನಿರ್ಲಕ್ಷ್ಯ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Apr 09, 2024, 12:45 AM IST
8ಕೆಎಂಎನ್‌ಡಿ-5ಮಂಡ್ಯದ ಸುಮರವಿ ಸಮುದಾಯ ಭವನದಲ್ಲಿ ನಗರಸಭೆ ವ್ಯಾಪ್ತಿಯ ಮುಖಂಡರು, ಸದಸ್ಯರ ಸಭೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಂಗ್ರೆಸ್‌ ಗೆಲುವಿನೊಂದಿಗೆ ಮುಂದಿನ 20 ವರ್ಷ ಪಕ್ಷ ಜಿಲ್ಲೆಯೊಳಗೆ ಬಲವರ್ಧನೆಗೊಳ್ಳುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಲೋಕಸಭೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಿಸಬೇಡಿ. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ. ಇದರಿಂದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಾನಮಾನಗಳು ದೊರೆಯಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸುಮರವಿ ಸಮುದಾಯ ಭವನದಲ್ಲಿ ಆಯೋಜನೆಗೊಂಡಿದ್ದ ಮಂಡ್ಯ ನಗರಸಭೆ ವ್ಯಾಪ್ತಿಯ ಪಕ್ಷದ ಮುಖಂಡರು, ನಗರಸಭಾ ಸದಸ್ಯರ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಂಗ್ರೆಸ್‌ ಗೆಲುವಿನೊಂದಿಗೆ ಮುಂದಿನ 20 ವರ್ಷ ಪಕ್ಷ ಜಿಲ್ಲೆಯೊಳಗೆ ಬಲವರ್ಧನೆಗೊಳ್ಳುತ್ತದೆ ಎಂದರು.

ಈ ಚುನಾವಣೆ ಗೆಲುವು ನಮಗೆ ಬಹಳ ಮುಖ್ಯವಾಗಿದೆ. ಇದರಿಂದ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾರಮ್ಯ ಸಾಧಿಸಲಿದೆ ಎಂಬುದನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅರ್ಥೈಸಿಕೊಂಡು ಸ್ಟಾರ್ ಚಂದ್ರು ಗೆಲುವಿಗೆ ಶ್ರಮಿಸಬೇಕು. ನಗರ ವ್ಯಾಪ್ತಿಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ನಮ್ಮ ಪಕ್ಷದ ಕೆಲವೇ ಮುಖಂಡರು, ಕಾರ್ಯಕರ್ತರು, ಚುನಾವಣೆ ಬಗ್ಗೆ ತಾತ್ಸಾರ ತೋರುತ್ತಿರುವುದು ಸರಿಯಲ್ಲ, ಜಿಲ್ಲೆಯ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷ ಎಂದಿಗೂ ಲೋಕಸಭಾ ಚುನಾವಣೆಯನ್ನು ಇಷ್ಟೊಂದು ಗಂಭೀರವಾಗಿ ಪರಿಗಣಿಸಿರಲಿಲ್ಲ, ವ್ಯವಸ್ಥಿತ ಕಾರ್ಯವೈಖರಿಯಿಂದ ಗೆಲುವಿಗೆ ದುಡಿಯುವಂತೆ ಹೇಳಿದರು.

ಹಿಂದುಳಿತ, ದಲಿತ, ಅಲ್ಪಸಂಖ್ಯಾತ ಮತದಾರರು ಸ್ವಯಂ ಪ್ರೇರಿತರಾಗಿ ಪಕ್ಷದ ಅಭ್ಯರ್ಥಿಗೆ ಮತ ನೀಡಲು ಮುಂದಾಗಿದ್ದಾರೆ. ಒಕ್ಕಲಿಗರು ಸಹ ತುಂಬು ಅಸ್ಥೆ ವಹಿಸಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ಜಿಲ್ಲೆಯ ಅಭಿವೃದ್ಧಿಯನ್ನು ಮುಂದೆ ಮಾಡಿ ಮತಯಾಚಿಸಬೇಕೆಂದು ಸಲಹೆ ನೀಡಿದರು.

ಎಚ್.ಡಿ.ದೇವೆಗೌಡರು ಮುಖ್ಯಮಂತ್ರಿ, ಪ್ರಧಾನ ಮಂತ್ರಿಯಾಗಿದ್ದರು. ಕುಮಾರಸ್ವಾಮಿ 2 ಬಾರಿ ಮುಖ್ಯಮಂತ್ರಿ ಆಗಿದ್ದರು. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರೇ ಆಯ್ಕೆಯಾಗಿದ್ದರು. ಆದರೂ ಜಿಲ್ಲೆಯ ನಿರೀಕ್ಷಿತ ಅಭಿವೃದ್ಧಿಗೆ ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಧರ್ಮಸಿಂಗ್ ಆಡಳಿತಾವಧಿಯಲ್ಲಿ ಜಿಲ್ಲಾ ಕೇಂದ್ರಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಅಭಿವೃದ್ಧಿಯನ್ನು ಹಾಗೂ ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟು ಕಾಂಗ್ರೆಸ್‌ ಪರವಾಗಿ ಮತಗಳನ್ನು ಸೆಳೆಯುವಂತೆ ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಪಕ್ಷದ ಕಾರ್ಯಾಧ್ಯಕ್ಷ ಚಿದಂಬರ್, ಮಹಿಳೆ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರ ಘಟಕದ ಅಧ್ಯಕ್ಷ ರುದ್ರಪ್ಪ, ಎಸ್ಸಿ,ಎಸ್ಟಿ ಘಟಕದ ಅಧ್ಯಕ್ಷ ಶ್ರೀಧರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬೀ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್ ಇತರರು ಉಪಸ್ಥಿತರಿದ್ದರು.

ನಗರಸಭೆ ಚುನಾವಣೆಗೆ ಲೋಕಸಭೆ ಚುನಾವಣೆ ಬುನಾದಿ

ಮುಂದಿನ ನಗರಸಭೆ ಚುನಾವಣೆಗೆ ಬುನಾದಿಯಾಗಲಿರುವ ಲೋಕಸಭಾ ಚುನಾವಣೆಯನ್ನೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು. ಆ ಮೂಲಕ ನಗರಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿ ಜಯಗಳಿಸಲು ಲೋಕಸಭಾ ಚುನಾವಣೆಯ ಗೆಲುವು ಅನಿವಾರ್ಯವಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.

ಮಂಡ್ಯನಗರದ ಯುಜಿಡಿ ಅನುಷ್ಟಾನಕ್ಕೆ 200 ಕೋಟಿ ರು.ಅನುದಾನ, ನಗರ ವ್ಯಾಪ್ತಿಯ ರಸ್ತೆ ಅಭಿವೃದ್ದಿಗೆ 50 ಕೋಟಿ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ. 33 ಕೋಟಿ ರೂ. ವೆಚ್ಚದಲ್ಲಿ ಎಂ.ಸಿ ರಸ್ತೆ, ಪಾದಾಚಾರಿ ಮಾರ್ಗ ಹಾಗೂ ವೃತ್ತಗಳ ಅಭಿವೃದ್ದಿಗೆ ಯೋಜನೆ ಕಾರ್ಯಗತಗೊಳ್ಳಲಿದೆ ಎಂದರು.

ಸಚಿವರ ಅಪೇಕ್ಷೆಯಂತೆ ಮಂಡ್ಯನಗರ ವ್ಯಾಪ್ತಿಯಲ್ಲಿ 25 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 15 ಸಾವಿರ ಬಹುಮತ ಗಳಿಸಿ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ