ಕನ್ನಡಪ್ರಭ ವಾರ್ತೆ ಹಾಸನ
ಲೋಕಾಯುಕ್ತ ಎಸ್ಪಿ ನಂದಿನಿ ನೇತೃತ್ವದಲ್ಲಿ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು ಸೇರಿದಂತೆ ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಆಗಮಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಶೀಲನೆಯಲ್ಲಿ ಭಾಗವಹಿಸಿದ್ದರು. ಸುಮಾರು ಆರು ವಾಹನಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲಿಕೆ ಕಚೇರಿಗೆ ಆಗಮಿಸಿದ್ದು, ಏಕಕಾಲದಲ್ಲಿ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತರ ಕಚೇರಿ, ಎಇ, ಎಇಇ ಸೇರಿದಂತೆ ವಿವಿಧ ವಿಭಾಗಗಳ ಕಚೇರಿಗಳಿಗೆ ತೆರಳಿ ದಾಖಲೆಗಳು, ಕಡತಗಳು ಹಾಗೂ ಅಧಿಕಾರಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿದರು. ಕೆಲವು ಕಚೇರಿಗಳ ಬಾಗಿಲುಗಳನ್ನು ಮುಚ್ಚಿಕೊಂಡು ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದು ಕಂಡುಬಂದಿತು. ಸಿಬ್ಬಂದಿಯ ಹಾಜರಾತಿ, ಕರ್ತವ್ಯ ನಿರ್ವಹಣೆಯ ವಿವರಗಳು ಹಾಗೂ ಸಾರ್ವಜನಿಕರಿಗೆ ಒದಗಿಸಬೇಕಾದ ಸೇವೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.
ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಆಧರಿಸಿ ಯಾವ ಹಂತದಲ್ಲಿ ವಿಳಂಬವಾಗುತ್ತಿದೆ, ಅರ್ಜಿಗಳ ವಿಲೇವಾರಿ ಹೇಗೆ ನಡೆಯುತ್ತಿದೆ ಹಾಗೂ ಸಾರ್ವಜನಿಕ ಸೇವೆ ಪಡೆಯುವ ಸಂದರ್ಭದಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪವಿದೆಯೇ ಎಂಬ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು. ಪಾಲಿಕೆ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರು ಲೋಕಾಯುಕ್ತ ಎಸ್ಪಿ ನಂದಿನಿ ಅವರ ಮುಂದೆ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡರು. ವಿಶೇಷವಾಗಿ ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ಪಡೆಯಲು ವಿಳಂಬವಾಗುತ್ತಿದೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಮಧ್ಯವರ್ತಿಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಸ್ಪಂದಿಸುವ ರೀತಿಯಲ್ಲಿನ ಸಮಸ್ಯೆ ಸೇರಿದಂತೆ ಹಲವು ಅಹವಾಲುಗಳನ್ನು ಜನರು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದರು.ಪಾಲಿಕೆ ಆಯುಕ್ತರು, ಎಇಇ ಸೇರಿದಂತೆ ವಿವಿಧ ಅಧಿಕಾರಿಗಳಿಂದ ಲೋಕಾಯುಕ್ತ ತಂಡ ಹಲವು ಮಾಹಿತಿಗಳನ್ನು ಪಡೆದುಕೊಂಡಿತು. ಸಾರ್ವಜನಿಕರಿಂದ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಡತಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಳ್ಳಲಾಯಿತು. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಸಾರ್ವಜನಿಕ ಸೇವೆಗಳ ವಿಲೇವಾರಿ, ಅಧಿಕಾರಿಗಳ ಹಾಜರಾತಿ ಹಾಗೂ ಕರ್ತವ್ಯ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಅಧಿಕಾರಿಗಳು ತಪಾಸಣಾ ವಾರಂಟ್ನೊಂದಿಗೆ ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಿದರು ಎನ್ನಲಾಗಿದ್ದು, ಇದರಿಂದ ಪಾಲಿಕೆ ಆವರಣದಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು. ಸಾಮಾನ್ಯ ತಪಾಸಣೆಯ ರೀತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವಿವಿಧ ವಿಭಾಗಗಳಿಗೆ ತೆರಳಿ ದಾಖಲೆಗಳನ್ನು ಪರಿಶೀಲಿಸಿದ್ದು ವಿಶೇಷವಾಗಿತ್ತು. ಪಾಲಿಕೆಯ ಬಹುತೇಕ ಕಚೇರಿಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದ ಹಿನ್ನೆಲೆಯಲ್ಲಿ ಸಿಬ್ಬಂದಿಯಲ್ಲೂ ಆತಂಕದ ವಾತಾವರಣ ಕಂಡುಬಂತು.