ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರೊಬ್ಬರು ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ ಅಕ್ರಮ ನಿವೇಶನ ಮಂಜೂರು ಮಾಡಿಸಿಕೊಂಡಿರುವ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮನೆಗೆ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಸದಸ್ಯ ಸೇರಿದಂತೆ ಗ್ರಾಪಂ ಅಧಿಕಾರಿ ಮತ್ತು ಅಂದು ಕರ್ತವ್ಯದಲ್ಲಿದ್ದ ಸೋಮವಾರಪೇಟೆ ತಾಲೂಕು ತಹಸೀಲ್ದಾರ್ ಆಗಿದ್ದ ಎಸ್ ಮಹೇಶ್ ಶಾಮೀಲಾಗಿರುವ ಸಂಶಯ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಅವರ ಮನೆಗೆ ಮತ್ತು ಸೋಮವಾರಪೇಟೆ ತಾಲೂಕು ಕಚೇರಿಗೆ ಲೋಕಾಯುಕ್ತ ತಂಡ ದಾಳಿ ನಡೆಸಿ ದಾಖಲೆಗಳನ್ನು ಸಂಗ್ರಹಿಸಿದೆ.ಕಾನೂನುಬಾಹಿರವಾಗಿ ನಿವೇಶನ ಹಕ್ಕು ಪತ್ರ ಸರ್ಕಾರದ ಆಸ್ತಿಗೆ ನಷ್ಟ ಉಂಟು ಮಾಡಿದ್ದಾರೆ ಎನ್ನುವ ಆರೋಪ ದೊಂದಿಗೆ ಲೋಕಾಯುಕ್ತ ಅಧಿಕಾರಿಗಳು ದೂರು ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ. ತಹಸೀಲ್ದಾರ್ ಆಗಿದ್ದ ಎಸ್. ಮಹೇಶ್ ಅವರು ಪ್ರಸಕ್ತ ಬೆಂಗಳೂರು ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಲೋಕಾಯುಕ್ತ ಎಸ್ ಪಿ ಉದೇಶ್ ಅವರ ನಿರ್ದೇಶನದಲ್ಲಿ ಲೋಕಾಯುಕ್ತ ಡಿವೈಎಸ್ ಪಿ ದಿನಕರ ಶೆಟ್ಟಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಏಕ ಕಾಲದಲ್ಲಿ ನಾಲ್ಕು ಕಡೆ ದಾಖಲೆಗಳನ್ನು ಕಲೆ ಹಾಕಿದ್ದು, ಗ್ರಾಪಂ ಮಾಜಿ ಸದಸ್ಯ ಹರೀಶ್ ಅವರಿಗೆ ಸೇರಿದ 9 ಪಿತ್ರಾರ್ಜಿತ ನಿವೇಶನಗಳ ದಾಖಲೆಗಳು ಮತ್ತು ಸ್ವಂತ ಮನೆಯ ದಾಖಲೆಗಳು ಸೇರಿದಂತೆ ಅಕ್ರಮವಾಗಿ ಪಡೆದ ನಿವೇಶನದ ಸಮಗ್ರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ಪುರಸಭೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಕಲೆ ಹಾಕಿದ್ದಾರೆ. ಡಿವೈಎಸ್ಪಿ ದಿನಕರ್ ಶೆಟ್ಟಿ ತನಿಖಾಧಿಕಾರಿಯಾಗಿದ್ದು, ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಗಳಾದ ವೀಣಾ ನಾಯಕ್, ವಿಜಯ್, ಶಾಂತನಾಥ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.