ದೇವಸಮುದ್ರ, ರಾಮಸಾಗರ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

KannadaprabhaNewsNetwork |  
Published : Oct 22, 2025, 01:03 AM IST
ಕಂಪ್ಲಿ ತಾಲೂಕಿನ ದೇವಸಮುದ್ರ ಮತ್ತು ರಾಮಸಾಗರ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡವು ಶುಕ್ರವಾರ ದಿಡೀರ್ ಬೇಟಿ ನೀಡಿ, ಆಸ್ಪತ್ರೆಗಳ ಕಾರ್ಯವೈಖರಿ ಹಾಗೂ ಸೌಲಭ್ಯಗಳ ಸ್ಥಿತಿ ಪರಿಶೀಲಿಸಿದರು. | Kannada Prabha

ಸಾರಾಂಶ

ಆಸ್ಪತ್ರೆಯ ಸೇವೆಗಳ ಕುರಿತು ಅವರ ಅಭಿಪ್ರಾಯ ಹಾಗೂ ಅಸಮಾಧಾನಗಳನ್ನು ಕೇಳಿಕೊಂಡರು.

ಕಂಪ್ಲಿ: ತಾಲೂಕಿನ ದೇವಸಮುದ್ರ ಮತ್ತು ರಾಮಸಾಗರ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡವು ದಿಢೀರ್ ಭೇಟಿ ನೀಡಿ, ಆಸ್ಪತ್ರೆಗಳ ಕಾರ್ಯವೈಖರಿ ಹಾಗೂ ಸೌಲಭ್ಯಗಳ ಸ್ಥಿತಿ ಪರಿಶೀಲಿಸಿದರು.

ಅಧಿಕಾರಿಗಳು ಆಸ್ಪತ್ರೆಯ ಸಿಬ್ಬಂದಿ ಹಾಜರಾತಿ ದಾಖಲೆಗಳು, ಔಷಧಿ ಸಂಗ್ರಹ ಪಟ್ಟಿ, ಲ್ಯಾಬೊರೇಟರಿ ಉಪಕರಣಗಳ ಲಭ್ಯತೆ, ಶೌಚಾಲಯ ಮತ್ತು ಮೂತ್ರಾಲಯಗಳ ಸ್ವಚ್ಛತೆ ಮೊದಲಾದ ಅಂಶಗಳನ್ನು ನಿಖರವಾಗಿ ಪರಿಶೀಲಿಸಿದರು.

ಆಸ್ಪತ್ರೆಯ ಒಳಾಂಗಣ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ರೋಗಿಗಳಿಗೆ ದೊರೆಯುತ್ತಿರುವ ಸೇವೆಗಳ ಬಗ್ಗೆ ಸ್ಥಳದಲ್ಲಿಯೇ ಮಾಹಿತಿ ಪಡೆದರು.

ಇನ್ನು ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿದ್ದ ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ನೇರವಾಗಿ ಮಾತನಾಡಿ, ಆಸ್ಪತ್ರೆಯ ಸೇವೆಗಳ ಕುರಿತು ಅವರ ಅಭಿಪ್ರಾಯ ಹಾಗೂ ಅಸಮಾಧಾನಗಳನ್ನು ಕೇಳಿಕೊಂಡರು. ರೋಗಿಗಳಿಂದ ಬಂದ ಅಸಮಾಧಾನಗಳನ್ನು ದಾಖಲು ಮಾಡಿ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ವೇಳೆ ಬಳ್ಳಾರಿಯ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಯ ಪ್ರಮುಖ ತಾಣಗಳು. ವೈದ್ಯರು ಮತ್ತು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಔಷಧಿ ಹೊರಗಡೆ ಖರೀದಿಸಲು ರೋಗಿಗಳನ್ನು ಸೂಚಿಸಬಾರದು. ಯಾವುದೇ ರೀತಿಯ ಲಂಚ, ಆಮೀಷ ಅಥವಾ ಅಕ್ರಮ ವ್ಯವಹಾರಗಳಿಗೆ ತೊಡಗದಂತೆ ಎಚ್ಚರವಾಗಬೇಕು ಎಂದು ಹೇಳಿದರು.

ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ಬಳಕೆ ಮಾಡುವುದು ಕಾನೂನುಬಾಹಿರ. ರೋಗಿಗಳೊಂದಿಗೆ ಸೌಜನ್ಯ, ಸಹಾನುಭೂತಿ ಮತ್ತು ಸೇವಾಭಾವದಿಂದ ವರ್ತಿಸಬೇಕು. ಸರ್ಕಾರ ನೀಡಿರುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ, ಸಾರ್ವಜನಿಕ ನಂಬಿಕೆಗೆ ಧಕ್ಕೆ ಬಾರದಂತೆ ಕಾಳಜಿ ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ರಾಮಸಾಗರ ಪಿಎಚ್‌ಸಿ ವೈದ್ಯಾಧಿಕಾರಿ ಡಾ.ಜಿ. ಅರುಣ್, ದೇವಸಮುದ್ರ ಪಿಎಚ್‌ಸಿ ವೈದ್ಯಾಧಿಕಾರಿ ಡಾ. ರುಕ್ಮಿಣಿ, ಆಸ್ಪತ್ರೆ ಸಿಬ್ಬಂದಿ ಹಾಗೂ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ