)
ಕನ್ನಡಪ್ರಭ ವಾರ್ತೆ ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಖುದ್ದು ರಾಜ್ಯ ಶಿಕ್ಷಣ ನೀತಿ ಆಯೋಗದ ಅಧ್ಯಕ್ಷರಾದ ಪ್ರೊ.ಸುಖದೇವ್ ಥೋರಟ್ ಅವರೇ ವರದಿ ಬಗ್ಗೆ ವಿವರಣೆ ನೀಡಿದರು.
ವರದಿಯಲ್ಲಿ ರಾಜ್ಯದ ಶಾಲೆಗಳಲ್ಲಿ ದ್ವಿಭಾಷಾ ನೀತಿ ಅನುಷ್ಠಾನಗೊಳಿಸಬೇಕು. ಇದರಲ್ಲಿ ಒಂದು ಮಾತೃಭಾಷೆ ಅಥವಾ ಕನ್ನಡ ಕಡ್ಡಾಯವಾಗಿರಬೇಕು ಎಂದು ಶಿಫಾರಸು ಮಾಡಲಾಗಿದೆ. ಜತೆಗೆ, ಖಾಸಗಿ ಅನುದಾನ ರಹಿತ ಸಂಸ್ಥೆಗಳಲ್ಲೂ ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ನಿಯಮ ಅನ್ವಯಿಸಬೇಕು. ರಾಜ್ಯಾದ್ಯಂತ ಮಾಧ್ಯಮಿಕ ಶಿಕ್ಷಣವನ್ನು ಸಾರ್ವತ್ರಿಕಗೊಳಿಸಬೇಕು. ಕೆಲ ಪರೋಕ್ಷ ತೆರಿಗೆಗಳ ಮೇಲೆ ಶಿಕ್ಷಣ ಸರ್ಚಾರ್ಜ್ ಪರಿಗಣಿಸಿ ಶಿಕ್ಷಣ ಬಜೆಟ್ ಹೆಚ್ಚಳ ಮಾಡಬೇಕು. ಖಾಸಗಿ ಶಾಲಾ-ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಸಂಪುಟ ಸಭೆ ಗಮನಕ್ಕೆ ತರಲಾಯಿತು ಎಂದು ಮೂಲಗಳು ತಿಳಿಸಿವೆ.ಉಪಸಮಿತಿ ರಚನೆಗೆ ನಿರ್ಧಾರ:
ಇದೇ ವೇಳೆ ಸಂಪುಟ ಉಪಸಮಿತಿ ರಚನೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಿ ಸಂಪುಟ ನಿರ್ಧಾರ ಮಾಡಿತು ಎಂದು ತಿಳಿದುಬಂದಿದೆ.
ರಾಜ್ಯ ಶಿಕ್ಷಣ ನೀತಿ ಬಗ್ಗೆ ಏನು ಮಾಡಬೇಕು ಹಾಗೂ ಏನು ಮಾಡಬಾರದು ಎಂಬುದನ್ನು ನಿರ್ಧರಿಸಲು ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ ಹೀಗೆ ಪ್ರತಿಯೊಂದಕ್ಕೂ ಪ್ರತ್ಯೇಕ ಅಂಶಗಳಿವೆ. ಹೀಗಾಗಿ ಅನುಷ್ಠಾನ ಕುರಿತು ಸೂಕ್ತ ಶಿಫಾರಸು ಮಾಡಲು ಸಂಪುಟ ಉಪಸಮಿತಿ ರಚನೆಗೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.