ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಬೆಂಗಳೂರು -ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಟಿಪ್ಪರ್ ನುಗ್ಗಿದ ಪರಿಣಾಮವಾಗಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ನಗರದ ಹೊರ ವಲಯದ ಹುನೇಗಲ್ಲು ಬಳಿ ಮತ್ತೊಂದು ಹಾದಿಯಲ್ಲಿ ಬರುತ್ತಿದ್ದ ಟ್ರ್ಯಾಕ್ಟರ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯನ್ನು ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುವ ಬಸವರಾಜು (37) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಟಿಪ್ಪರ್ ನೆಲಕ್ಕೆ ಪಲ್ಟಿ ಹೊಡೆದಿದೆ. ಟ್ರ್ಯಾಕ್ಟರ್ ಕೂಡ ನಜ್ಜುಗುಜ್ಜಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.