ಚನ್ನಗಿರಿ: ಮಾದಿಗ ಸಮಾಜದ 35 ವರ್ಷಗಳ ನಿರಂತರ ಹೋರಾಟ ಫಲವಾಗಿ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತಂದಿದೆ. ಈ ಹೋರಾಟವನ್ನು ಬದ್ಧತೆಯಿಂದ ಮುನ್ನಡೆಸಿದ ಹೋರಾಟಗಾರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ತಾಲೂಕು ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್ ಹೇಳಿದರು.
ಜಿಲ್ಲಾ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎಗ್ಗೆರೆ ರಂಗಪ್ಪ ಮಾತನಾಡಿ, ಒಳಮೀಸಲಾತಿ ಜಾರಿಯಾಗುವ ನಿಟ್ಟಿನಲ್ಲಿ ನಮ್ಮಗಳ ಕಾರ್ಯ ಸಾಗಬೇಕಾಗಿದೆ. ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 6 ಪರ್ಸೆಂಟ್, ಉಳಿದ ಜಾತಿಗಳಿಗೆ 5 ಪರ್ಸೆಂಟ್ ಮೀಸಲಾತಿ ನೀಡಿದ್ದು, ಅಲೆಮಾರಿ ಸಮುದಾಯಗಳಿಗೆ 1 ಪರ್ಸೆಂಟ್ ಮೀಸಲಾತಿ ನೀಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಒಳಮೀಸಲಾತಿ ರಾಜ್ಯದಲ್ಲಿ ಸಮರ್ಪಕ ಅನುಷ್ಠಾನಕ್ಕೆ ತರುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ದಲಿತ ಸಂಘಟನೆ ಪ್ರಮುಖರಾದ ನಲ್ಲೂರು ಶೇಖರಪ್ಪ, ಪಿ.ರುದ್ರಪ್ಪ, ಚಿಕ್ಕೂಲಿಕೆರೆ ಶಿವಲಿಂಗಪ್ಪ, ಕೋಗಲೂರು ಪ್ರಕಾಶ್, ಮಾಚನಾಯ್ಕನಹಳ್ಳಿ ಮಂಜುನಾಥ್, ಸಿ.ಬಸವರಾಜು ಸೇರಿದಂತೆ ಮೊದಲಾದವರು ಹಾಜರಿದ್ದರು.