ಬೆಂಗಳೂರಿನಲ್ಲಿ ಭಾನುವಾರ ಮಾದಿಗ ಮುಖಂಡರ ಸಭೆ: ಮಾಜಿ ಸಚಿವ ಎಚ್.ಆಂಜನೇಯ

KannadaprabhaNewsNetwork | Published : Apr 27, 2025 1:35 AM

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಮೇ 5 ರಿಂದ ಜಾತಿಗಣತಿಗೆ ದತ್ತಾಂಶ ಸಂಗ್ರಹ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆ ಮಾದಿಗರ ಪಾತ್ರವೇನು ಎಂಬ ಬಗ್ಗೆ ಚರ್ಚಿಸಲು ಏ.27ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಭೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಮೇ 5 ರಿಂದ ಜಾತಿಗಣತಿಗೆ ದತ್ತಾಂಶ ಸಂಗ್ರಹ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆ ಮಾದಿಗರ ಪಾತ್ರವೇನು ಎಂಬ ಬಗ್ಗೆ ಚರ್ಚಿಸಲು ಏ.27ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ರಾಜ್ಯದಲ್ಲಿ ಜಾತಿಗಣತಿ ನಡೆಸಿ, ಬಳಿಕ ಒಳಮೀಸಲಾತಿ ಜಾರಿಗೊಳಿಸುವುದು ಸೂಕ್ತವೆಂಬ ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಜಾತಿಗಣತಿ ಕಾರ್ಯಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಾದಿಗರ ಪಾತ್ರವೇನು ಎಂಬ ವಿಷಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದುು. ಮಾದಿಗ ಮತ್ತು ಸಂಬಂಧಿತ ಜಾತಿಗಳಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಕ್ರಮಕೈಗೊಳ್ಳುವ ಕುರಿತು ಸಭೆ ನಿರ್ಣಯ ಕೈಗೊಳ್ಳಲಿದೆ ಎಂದಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಸಿದ ಎಡ ಗುಂಪಿನಲ್ಲಿ ಗುರುತಿಸಿಕೊಂಡಿರುವ ಮಾದಿಗ ಮತ್ತು ಸಂಬಂಧಿತ ಜಾತಿಗಳ ಮುಖಂಡರು, ಸಂಘಟನೆ ಪದಾಧಿಕಾರಿಗಳು, ಸಮುದಾಯದ ಹಾಲಿ-ಮಾಜಿಗಳಾದ ಸಚಿವರು, ಶಾಸಕರು, ಸಂಸದರು, ಬುದ್ಧಿಜೀವಿಗಳು, ಚಿಂತಕರು, ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಂಭೀರ ಚರ್ಚೆ ನಡೆಸುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಒಳ ಮೀಸಲು ಜಾರಿಗೆ ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಸರ್ವರಿಗೂ ಸಮಪಾಲು ಎಂಬ ಚಿಂತನೆ ಹೊಂದಿರುವ ಸಿಎಂ ಯಾವ ಸಮುದಾಯಕ್ಕೂ ಅನ್ಯಾಯ ಮಾಡುವುದಿಲ್ಲ ಎಂದಿದ್ದಾರೆ. ಅವರ ಕಾರ್ಯಕ್ಕೆ ಬೆಂಬಲವಾಗಿ ನಿಲ್ಲುವ ಜೊತೆಗೆ ಮಾದಿಗ ಮತ್ತು ಸಂಬಂಧಿತ ಜಾತಿಗಳಲ್ಲಿ ಜಾಗೃತಿ ಮೂಡಿಸುವ ದೊಡ್ಡ ಹೊಣೆಗಾರಿಕೆ ಸಮುದಾಯದ ಮೇಲಿದೆ ಎಂದು ಆಂಜನೇಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article