ಒಳ ಮೀಸಲಿಗೆ ಮಾರ್ದನಿಸಿದ ಮಾದಿಗರ ಆಕ್ರೋಶ

KannadaprabhaNewsNetwork |  
Published : Aug 01, 2025, 11:45 PM IST
ಚಿತ್ರದುರ್ಗ ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ಒಳ ಮೀಸಲಾತಿ ಜಾರಿಗೊಳಿಸಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸ್ವಾಭಿಮಾನಿ ಮಾದಿಗ ಮಹಾಸಭಾದಿಂದ ಶುಕ್ರವಾರ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಪರಿಶಿಷ್ಟರಿಗೆ ಒಳ ಮೀಸಲು ಜಾರಿಗಾಗಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಸ್ವಾಭಿಮಾನಿ ಮಾದಿಗ ಮಹಾಸಭಾದ ಕಾರ್ಯಕರ್ತರು ಶುಕ್ರವಾರ ಚಿತರ್ದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ವಿಫಲ ಯತ್ನ ಮಾಡಿದರು.

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಒನಕೆ ಓಬವ್ವ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಬಹಿರಂಗ ಸಭೆ ನಡೆಸಿದರು. ಸಭೆ ನಂತರ ಇದ್ದಕ್ಕಿದ್ದಂತೆ ರೊಚ್ಚಿಗೆದ್ದ ಪ್ರತಿಭಟಾಕಾರರು ಪೊಲೀಸ್ ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿ ಧಿಕ್ಕಾರಗಳನ್ನು ಕೂಗಿದರು. ಇದೇ ವೇಳೆ ಒಂದಿಷ್ಟು ಮಂದಿ ಡಿಸಿ ಕಚೇರಿ ಮೆಟ್ಟಿಲುಗಳ ಹತ್ತಿ ಚೇಂಬರ್ ವರೆಗೂ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಇದಕ್ಕೂ ಮುನ್ನ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸೂರನಹಳ್ಳಿ ಶ್ರೀನಿವಾಸ್ ಎಪ್ಪತ್ತು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷ ಮಾದಿಗರ ಮತಗಳನ್ನು ಪಡೆದು ವಂಚಿಸಿಕೊಂಡು ಬರುತ್ತಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿ ಇಂದಿಗೆ ಒಂದು ವರ್ಷಗಳು ಮುಗಿದಿದ್ದರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಇನ್ನು ಕಾಲಹರಣ ಮಾಡುತ್ತಿದ್ದಾರೆ. ಆ.15 ರೊಳಗೆ ಒಳ ಮೀಸಲಾತಿಯನ್ನು ಕೊಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಿ ಜೈಲಿಗೆ ಹೋಗಲು ಸಿದ್ದರಿದ್ದೇವೆಂದು ಎಚ್ಚರಿಸಿದರು.

ನಾಮಕಾವಸ್ಥೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಿದ್ದು, ಈಗ ದತ್ತಾಂಶ ಸಂಗ್ರಹಕ್ಕಾಗಿ ರಾಜ್ಯ ಸರ್ಕಾರ ನಾಗಮೋಹನ್‍ದಾಸ್ ಆಯೋಗ ರಚಿಸಿ ವರದಿಗಾಗಿ ಕಾಯುತ್ತಿದೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್‍ನಲ್ಲೇ ಚರ್ಚಿಸಿ ಒಳ ಮೀಸಲಾತಿ ಜಾರಿಗೊಳಿಸುತ್ತೇವೆಂದು ಈಗಿನ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದರು. ಇದುವರೆವಿಗೂ ಈಡೇರಿಲ್ಲ. ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದರು.

ಜಿ.ಎಚ್.ಮೋಹನ್‍ಕುಮಾರ್ ಮಾತನಾಡಿ, ಒಳ ಮೀಸಲಾತಿಗಾಗಿ ಮೂರುವರೆ ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದೇವೆ. ಒಳ ಮೀಸಲು ಜಾರಿಗೆ ಕಾನೂನು ತೊಡಕು ಇಲ್ಲ. ರಾಜಕಾರಣಿಗಳ ಒಳ ಹೊಡೆತ ಮಾತ್ರ ಇದೆ.ಇದರ ಬಗ್ಗೆ ಮಾದಿಗರು ಚಿಂತಿಸಬೇಕಿದೆ. ಹಿಂದಿನಿಂದಲೂ ಮಾದಿಗರ ಮತಗಳನ್ನು ಪಡೆಯುತ್ತಿರುವ ಕಾಂಗ್ರೆಸ್ ಮಾದಿಗರ ಪರವಾಗಿಲ್ಲ. ದಲಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಎಂದಿಗೂ ಒಳ ಮೀಸಲಾತಿ ಬಗ್ಗೆ ಧ್ವನಿ ಎತ್ತಲಿಲ್ಲ. ಈ ಸಾರಿ ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದರು.

ದಲಿತ ಮುಖಂಡ ಮಹಾಂತೇಶ್ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮತ ಪಡೆದು ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಚನೆಯಾಗಲು ಮಾದಿಗರು ಕಾರಣ ಎನ್ನುವುದನ್ನು ಮರೆತಿದ್ದಾರೆ. ಒಳ ಮೀಸಲಾತಿ ಜಾರಿಯಾಗದಿದ್ದರೆ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.

ಕರಿಬಸಪ್ಪ ಮಾತನಾಡಿ, ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷವಾಗಿದೆ. ನೆರೆಯ ಆಂಧ್ರ, ಹರಿಯಾಣ, ತಮಿಳುನಾಡು, ಪಂಜಾಬ್‍ನಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲಿ ಇನ್ನು ಅನುಷ್ಟಾನಕ್ಕೆ ತರಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆಂದರು. ಮುರಾರ್ಜಿ, ಭೀಮನಕೆರೆ ಶಿವಮೂರ್ತಿ, ಹನುಮಂತರಾಯಪ್ಪ, ಶಿವಣ್ಣ, ಬಸಮ್ಮ, ಜಯಣ್ಣ, ಕೃಷ್ಣಮೂರ್ತಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ