ಜಿಲ್ಲೆಯಲ್ಲಿ ಲವ್ ಜಿಹಾದ್, ಮತಾಂತರ ವ್ಯಾಪಕವಾಗಿ ಹರಡುತ್ತಿದ್ದರೂ ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಕಂಡಿದೆ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಭೋಜೆ ಗೌಡ ಆರೋಪಿಸಿದರು.
ಮಡಿಕೇರಿ: ಜಿಲ್ಲೆಯಲ್ಲಿ ಲವ್ ಜಿಹಾದ್, ಮತಾಂತರ ವ್ಯಾಪಕವಾಗಿ ಹರಡುತ್ತಿದ್ದರೂ ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಕಂಡಿದೆ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಭೋಜೆ ಗೌಡ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಸರ್ಗಧಾಮದಲ್ಲಿ ಮುಸ್ಲಿಮರು ನಡೆಸುವ ವಾಣಿಜ್ಯೋದ್ಯಮಕ್ಕೆ ನಮ್ಮ ತಕರಾರಿಲ್ಲ. ಆದರೆ, ಇಲ್ಲಿ ಸಾಕಷ್ಟು ಹಿಂದೂ ಯುವತಿಯರು ಕೆಲಸ ಮಾಡುತ್ತಿದ್ದಾರೆ. ಇದನ್ನೇ ಬಳಸಿಕೊಳ್ಳುತ್ತಿರುವ ಕೆಲವರು ಲವ್ ಜಿಹಾದ್, ಮತಾಂತರಕ್ಕೆ ಪ್ರಯತ್ನಿಸುತ್ತಿದ್ದಾರೆ. ಇದು ಲವ್ ಜಿಹಾದ್, ಮತಾಂತರ ಪ್ರಕರಣಕ್ಕೆ ಪುಷ್ಠಿ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ ಹಿಂದೂ ಸುರಕ್ಷಾ ಸಮಿತಿ ನೇತೃತ್ವದಲ್ಲಿ ಲವ್ ಜಿಹಾದ್ ಮತಾಂತರದ ವಿರುದ್ಧ ಜೂ.೩೦ರಂದು ನಡೆಯುವ ಬೃಹತ್ ಜನಜಾಗೃತಿ ಜನಾಂದೋಲನ ಸಭೆಗೆ ಹಿಂದೂ ಜಾಗರಣ ವೇದಿಕೆ ಬೆಂಬಲ ನೀಡಲಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಈ ಜಾಲದ ಹಿಂದಿರುವವರನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಇಂತಹ ಪ್ರಕರಣದ ವಿರುದ್ಧ ಹಿಂದೂ ಜನಾಂಗ ಜಾಗೃತರಾಗಬೇಕು. ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ, ಹಿಂದೂ ಜಾಗರಣ ವೇದಿಕೆ ಪೊಲೀಸ್ ಇಲಾಖೆ ಮಾಡಬೇಕಾದ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸಮಿತಿ ಸದಸ್ಯ ಅಜಿತ್ ಕುಕ್ಕೆರ ಮಾತನಾಡಿ, ಲವ್ ಜಿಹಾದ್ ಪ್ರಕರಣ ದೇಶದಾದ್ಯಂತ ನಡೆಯುತ್ತಿದೆ. ಆದರೂ ಕ್ರಮ ಆಗುತ್ತಿಲ್ಲ ಎಂದರು.
ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕಣ್ಣೊರೆಸುವ ತಂತ್ರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳದಿದ್ದರೆ ಹಿಂದೂ ಜಾಗರಣ ವೇದಿಕೆ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಲಿದೆ ಎಂದು ಎಚ್ಚರಿಸಿದರು.
ಮಡಿಕೇರಿ ತಾಲೂಕು ಸಂಯೋಜಕ್ ಅಪ್ಪುರೈ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ತಿಮ್ಮಯ್ಯ, ಪ್ರಚಾರ ಪ್ರಮುಖ್ ಭುವನ್ ಗೌಡ, ಪ್ರಮುಖರಾದ ಮಾದಾಪುರ ಸುನಿಲ್ ಸುದ್ದಿಗೋಷ್ಠಿಯಲ್ಲಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.