ಮಡಿಕೇರಿ: ನಿವೇಶನ ರಹಿತರಿಂದ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Apr 25, 2025, 11:46 PM IST
ಬೃಹತ್ ಪ್ರತಿಭಟನೆ | Kannada Prabha

ಸಾರಾಂಶ

ಎಐಬಿಎಸ್‌ಪಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್ ಹಾಗೂ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಡಳಿತ ಭವನದ ವರೆಗೆ ನಿವೇಶನ ರಹಿತರು ಘೋಷಣೆಗಳ ಸಹಿತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂತಿಮ ಸಂಸ್ಕಾರಕ್ಕೆ ಸ್ಮಶಾನದ ಜಾಗವೂ ಇಲ್ಲ: ಕೆ.ಮೊಣ್ಣಪ್ಪ

ಕನ್ನಡಪ್ರಭ ವಾರ್ತೆ ಮಡಿಕೇರಿ

ಭೂ ರಹಿತ ಬಡ ಕುಟುಂಬಗಳಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ಎಐಬಿಎಸ್‌ಪಿಯ ರಾಜ್ಯಾಧ್ಯಕ್ಷ ಮಾರಟ₨ಸಂದ್ರ ಮುನಿಯಪ್ಪ, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್ ಹಾಗೂ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಡಳಿತ ಭವನದ ವರೆಗೆ ನಿವೇಶನ ರಹಿತರು ಘೋಷಣೆಗಳ ಸಹಿತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪಕ್ಷದ ಪ್ರಮುಖರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಸ್ವಂತ ಸೂರಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ತೋಟಗಳ ಲೈನ್ ಮನೆಗಳಲ್ಲಿ ಬದುಕು ನಡೆಸುತ್ತಿರುವ ಬಡ ಶೋಷಿತ ಕಾರ್ಮಿಕ ವರ್ಗ ಸ್ವಂತ ನೆಲೆಗಾಗಿ ಹೋರಾಟಗಳನ್ನು ನಡೆಸುತ್ತಲೇ ಬಂದಿದೆ. ಸಾವನ್ನಪ್ಪಿದವರಿಗೆ ಕನಿಷ್ಟ ಗೌರವಯುತ ಅಂತಿಮ ಸಂಸ್ಕಾರಕ್ಕೆ ಸ್ಮಶಾನದ ಜಾಗವೂ ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಐಬಿಎಸ್‌ಪಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ಮಾತನಾಡಿ, ಹೊದ್ದೂರು ಮತ್ತು ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 800 ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯದ ಫಲಾನುಭವಿಗಳಿಗೆ ನಿವೇಶನ ಹಂಚುವಂತೆ ತೆಗೆದುಕೊಂಡ ಠರಾವಿಗೆ 2 ವರ್ಷಗಳೇ ಕಳೆದಿದ್ದರು, ಸ್ಪಂದನೆ ಸಿಕ್ಕಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ವಸತಿ ರಹಿತ ಬಡವರ್ಗದ ಮಂದಿ ಸೂರಿಗಾಗಿ ಸಂಬಂಧಪಟ್ಟ ಸಚಿವರಿಗೆ, ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊದ್ದೂರು, ಮೂರ್ನಾಡು ವಿಭಾಗದ ನಿವೇಶನ ರಹಿತರು ಸುದೀರ್ಘ ಹೋರಾಟವನ್ನು ನಡೆಸುತ್ತಿದ್ದಾರೆ. ಹೀಗಿದ್ದೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲವೆಂದು ಆರೋಪಿಸಿದರು.

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ನಿವೇಶನ ರಹಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಪ್ರತಿ ತಿಂಗಳು ಕುಂದುಕೊರತೆ ಸಭೆ ನಡೆಸಿ ಸಮಸ್ಯೆಗಳ ಬಗೆಹರಿಸಲು ಮುಂದಾಗಬೇಕೆಂದು ತಿಳಿಸಿದರು.ಬೇಡಿಕೆಗಳು:ಕಾಫಿ ತೋಟಗಳ ಕಾರ್ಮಿಕರನ್ನು ಜೀತಮುಕ್ತಗೊಳಿಸಬೇಕು, ಜಿಲ್ಲೆಯ ಸುಮಾರು 5 ಸಾವಿರ ಎಕರೆ ಒತ್ತುವರಿಯನ್ನು ತೆರವುಗೊಳಿಸಿ ಭೂ ರಹಿತ ಕುಟುಂಬಗಳಿಗೆ ಕನಿಷ್ಟ 3 ಎಕರೆಯಂತೆ ಹಂಚಿಕೆ ಮಾಡಬೇಕು, ಚೇರಳ ಶ್ರೀಮಂಗಲ, ಹೊದ್ದೂರು ಮತ್ತು ಮೂರ್ನಾಡು ಪಂಚಾಯ್ತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಿ ಮನೆ ನಿರ್ಮಿಸಿಕೊಡಬೇಕು.

ವಿರಾಜಪೇಟೆ ತಾಲೂಕಿನ ಅಮ್ಮತ್ತಿ, ಬೊಳ್ಳುಮಾಡು ಗ್ರಾಮ, ಮಾದಾಪುರದ ಗರಗಂದೂರು, ಪರಿಶಿಷ್ಟ, ಹಿಂದುಳಿದ ವರ್ಗದ ವಸತಿ ರಹಿತರಿಗೆ ನಿವೇಶನ ಮತ್ತು ಮನೆ ಒದಗಿಸಬೇಕು, ಕೊಡಗು ಜಿಲ್ಲಾದ್ಯಂತ ಬಗ‌ರ್ ಹುಕುಂ ಸಾಗುವಳಿಯಡಿ ಅರ್ಜಿ ಸಲ್ಲಿಸಿರುವವರಿಗೆ ಸಾಗುವಳಿ ಚೀಟಿ ನೀಡಬೇಕು, ನಿವೇಶನ ಹೋರಾಟಗಾರರ ಮೇಲೆ ಹಾಕಿರುವ ಸುಳ್ಳು ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು, ಪ್ರತಿ ಗ್ರಾಮದಲ್ಲಿ ಸ್ಮಶಾನ ಭೂಮಿಯನ್ನು ಕಾಯ್ದಿರಿಸಬೇಕು, ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿಯವರಿಂದ ಜಮೀನು ಖರೀದಿಸಿ ಸ್ಮಶಾನ ಭೂಮಿ ಒದಗಿಸಬೇಕು, ಪ್ರತಿ ಹೋಬಳಿ ಕೇಂದ್ರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಎಐಬಿಎಸ್‌ಪಿಯ ರಾಜ್ಯ ಸಂಯೋಜಕ ಆ‌ರ್.ಮುನಿಯಪ್ಪ, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್, ರಾಜ್ಯ ಉಪಾಧ್ಯಕ್ಷರಾದ ಸಿಗಾ ನಾಯಕ್, ವೆಂಕಟಗಿರಿಯಯ್ಯ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ನಿವೇಶನ ರಹಿತರು ಪಾಲ್ಗೊಂಡಿದ್ದರು.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ