ಕನ್ನಡಪ್ರಭ ವಾರ್ತೆ ಯಾದಗಿರಿ
ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಉಳಿದ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ಬೆಳಗಿನ ಜಾವ ತೆರಳಿದ್ದ ಕಾರ್ಮಿಕರು ಕೆಲಸ ಮುಗಿಸಿಕೊಂಡು ಬೊಲೆರೋ ವಾಹನದಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ವಾಹನದಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.ಘಟನಾ ಸ್ಥಳಕ್ಕೆ ಭೀಮರಾಯನ ಗುಡಿ ಪೊಲೀಸ್ ಠಾಣೆಯ ಪಿಎಸ್ಐ ದೇವಿಂದ್ರರೆಡ್ಡಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.