ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.
3 ದಿನ ಸಿಐಡಿ ವಶಕ್ಕೆ:
ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 9 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದಿದ್ದರು. ಇಂದಿಗೆ ಪೊಲೀಸ್ ವಶಕ್ಕೆ ಪಡೆದಿದ್ದ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.ಸಿಐಡಿ ಅಧಿಕಾರಿಗಳು ಆರೋಪಿಗಳನ್ನು 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೇಳಿದ್ದರು. ಆದರೆ ಚನ್ನಪಟ್ಟಣ ಪ್ರಧಾನ ಸಿವಿಲ್ ನ್ಯಾಯಾಧೀಶ ನ್ಯಾ. ಮಹೇಂದ್ರ 3 ದಿನಗಳು ಮಾತ್ರ ನೀಡಿದರು. ನ್ಯಾಯಾಲಯದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದ ಸಿಐಡಿ ಪೊಲೀಸರು ವಿಚಾರಣೆಗಾಗಿ ಕರೆದೊಯ್ದಿದ್ದು, ಜತೆಗೆ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಸಹ ಸ್ಥಳೀಯ ಪೊಲೀಸರಿಂದ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಮುರುಗೇಶ್, ಪ್ರಭಾಕರ್, ಮಧನ್ಕುಮಾರ್, ರಾಧಾರನ್ನು ಬಂಧಿಸಿದ್ದರು. ಆರೋಪಿಗಳೆಲ್ಲರೂ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪೆನ್ಮಾಗ್ರಂ ಗ್ರಾಮದವರವಾಗಿದ್ದು, ಎಲ್ಲಾ ಆರೋಪಿಗಳು ಪತ್ತೆಯಾಗಿ ವಿಚಾರಣೆ ನಡೆಯುತ್ತಿರುವ ಸಮಯದಲ್ಲಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.ಕೋಟ್.............
ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಬೇಕಿರುವ ಕಾರಣ ಹಿರಿಯ ಅಧಿಕಾರಿಗಳು ಪ್ರಕರಣವನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.- ಕಾರ್ತಿಕ್ರೆಡ್ಡಿ, ಎಸ್ಪಿ, ರಾಮನಗರ(ಮಗ್ಶಾಟ್ ಫೋಟೋ ಮಾತ್ರ)