ಕನ್ನಡಪ್ರಭ ವಾರ್ತೆ, ತುಮಕೂರುಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ನಾಲ್ಕು ದಶಕಗಳ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ತಮ್ಮ ಮೈಸೂರು ಸಂಸ್ಥಾನವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು ಆಧುನಿಕ ಮೈಸೂರಿನ ನಿರ್ಮಾಪಕರೆನಿಸಿಕೊಂಡವರು ಎಂದು ಇತಿಹಾಸ ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ ನುಡಿದರು.ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಭಾರತಮಾತಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯತಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.ಸಾಮಾಜಿಕ ನ್ಯಾಯದ ಪರವಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಿಂದುಳಿದ ವರ್ಗಗಳ ಏಳಿಗೆಗೆ 1916 ರಲ್ಲಿ ಮಿಲ್ಲರ್ ಸಮಿತಿಯನ್ನು ರಚಿಸಿ ಅದರ ಶಿಫಾರಸ್ಸಿನ ಆಧಾರದ ಮೇರೆಗೆ ಶೇ. 25 ರಷ್ಟು ಹುದ್ದೆಗಳನ್ನು ಶೋಷಿತರಿಗೆ ಮೀಸಲಿಟ್ಟರು. ವಿಶೇಷವಾಗಿ ಹಿಂದುಳಿದ ಮತ್ತು ಅಸ್ಪೃಶ್ಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಆದೇಶ ಹೊರಡಿಸಿದರು. ಸಾಮಾಜಿಕ ನ್ಯಾಯದ ವಿಚಾರದಲ್ಲಿ ತೆಗೆದುಕೊಂಡ ಈ ಕ್ರಮ ಭಾರತದ ಇತಿಹಾಸದಲ್ಲೇ ಐತಿಹಾಸಿಕವಾಗಿದ್ದು ಗಾಂಧೀಜಿಯಿಂದ ರಾಜರ್ಷಿ ಎಂದು ಕರೆಸಿಕೊಂಡಿದ್ದರು ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಹಿತಿ ಲಕ್ಷ್ಮೀಕಾಂತರಾಜೇ ಅರಸು ಮಾತನಾಡಿ ಕೈಗಾರಿಕಾ ಯೋಜನೆಗಳಿಗೆ ಆದ್ಯತೆ ನೀಡಿ ಭದ್ರಾವತಿಯ ಕಾಗದ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಬೆಂಗಳೂರಿನ ಮೈಸೂರು ಸ್ಯಾಂಡಲ್ , ಮೈಸೂರಿನ ಮೈಸೂರು ಸಿಲ್ಕ್ಸ್ ಕಾರ್ಖಾನೆಗಳನ್ನು ತೆರೆದು ಅನೇಕ ಉದ್ಯೋಗಗಳನ್ನು ಸೃಷ್ಟಿ ಮಾಡಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಮಾತನಾಡಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಒಲವನ್ನಿರಿಸಿಕೊಂಡಿದ್ದ ನಾಲ್ವಡಿಯವರು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಅನೇಕ ಪ್ರಾಚೀನ ಗ್ರಂಥಗಳ ಪ್ರಕಟಣೆಗೆ ಧನಸಹಾಯ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಂಗಳೂರಿನಲ್ಲಿ ಕೃಷ್ಣರಾಜ ಪರಿಷನ್ಮಂದಿರವನ್ನು ಕಟ್ಟಿಸಿದರು ಎಂದರು. ನಿವೃತ್ತ ಪ್ರಾಂಶುಪಾಲ ರಾಮಕೃಷ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಸಂಚಾಲಕ ಕೆ.ಎಸ್. ಉಮಾಮಹೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿ.ಎಚ್. ಮಹದೇವಪ್ಪ ಸ್ವಾಗತಿಸಿದರು. ಚಿಕ್ಕಬೆಳ್ಳಾವಿ ಶಿವಕುಮಾರ್ ವಂದಿಸಿದರು. ಕಾರ್ಯಸಕ್ರಮದಲ್ಲಿ ಎಂ.ಜಿ. ಸಿದ್ಧರಾಮಯ್ಯ ಕುಮಾರಸ್ವಾಮಿ, ರಾಜಶೇಖರ್, ಅಬ್ಬಿನಹೊಳೆ ಸುರೇಶ್ ಇತರರು ಭಾಗವಹಿಸಿದ್ದರು.