ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!

KannadaprabhaNewsNetwork |  
Published : Mar 22, 2024, 01:07 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.

ನದಿಗಳಿಗೆ ನೀರು ಹರಿಸೋ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರು ಮಹಾ ಸಿಎಂ ಶಿಂಧೆಗೆ ಪತ್ರ ಬರೆದಿದ್ದಾರೆಂದು ಹೇಳುವ ಮೂಲಕ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು ಈಗಿರುವ ಪ್ರಮಾಣದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಆಗುವುದಿಲ್ಲ. ಹಾಗಾಗಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಹರಿಸುವಂತೆ ಸಿಎಂ ಮಾ.7ರಂದು ಬರೆದ ಪತ್ರದಲ್ಲಿ ತಿಳಿಸಿದ್ದರೂ ಈ ಪತ್ರಕ್ಕೆ ಸ್ಪಂದನೆಯೇ ಸಿಕ್ಕಿಲ್ಲವಂದು ವಿಷಾದಿಸಿದ್ದಾರೆ.

ಸಿಎಂ ಬರೆದ ಪತ್ರಕ್ಕೆ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಹಾರಾಷ್ಟ್ರದ ಅಧಿಕಾರಿಗಳ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಕಲಬುರಗಿ ಜಿಲ್ಲೆ ಹಾಗೂ ಈಗ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಫಜಲಪುರ ತಾಲೂಕಿನಲ್ಲಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಗೆ ನೀರು ಹರಿಸಲು ಪ್ರಯತ್ನ ನಡೆದಿದೆ ಎಂದಿದ್ದಾರೆ.

ಈ ನಡುವೆ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಿಂದ ಸೋನ್ನ ಬ್ಯಾರೆಜಿಗೆ ನೀರು ತರುವ ಪ್ರಯತ್ನ ಕೂಡ ನಡೆದಿದೆ. ಈ ನಿಟ್ಟಿನಲ್ಲಿ ಕಲಬುರಗಿ ಆರ್ ಸಿ ಅವರು ಬೆಳಗಾವಿ ಆರ್ ಸಿ ಅವರಿಗೆ ಪತ್ರ ಬರೆದಿದ್ದಾರೆಂದು ಸಚಿವ ಖರ್ಗೆ ತಿಳಿಸಿದ್ದಾರೆ.

ತೀವ್ರ ಬರ ಎದುರಿಸುತ್ತಿರುವ ಕಲಬುರಗಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ.

ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ: ಕುಡಿಯುವ ನೀರಿಗಾಗಿ ಹಣದ ಕೊರತೆ ಇಲ್ಲ ಪಿ.ಡಿ. ಖಾತೆಯಲ್ಲಿ ರೂ 16 ಕೋಟಿ ಹಾಗೂ ಗ್ರಾಮೀಣ ಕುಡಿಯುವ ನೀರು ವಿಭಾಗದ ಖಾತೆಯಲ್ಲಿ ರು. 127 ಕೋಟಿ ಅನುದಾನ ಲಭ್ಯವಿದೆ. ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎನ್‌ಡಿಆರ್‌ಎಫ್‌ ಅಡಿಯಲ್ಲಿ ಬಾಡಿಗೆ ಬೋರ್ ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು.

ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ತಯಾರಿಸಿ ತುರ್ತು ಕ್ರಮವಹಿಸಿ ಕುಡಿಯುವ ನೀರು ಒದಗಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದ್ದಾರೆ.

PREV

Recommended Stories

ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು