ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ ಡಾ. ತೋಂಟದ ಸಿದ್ಧರಾಮ ಶ್ರೀಗಳು ಶ್ರೀಮಠಕ್ಕೆ ಆಗಮಿಸಿದರು
ಗದಗ: ನಾಡಿನ ಜಾತ್ರೆಗಳಿಗೆ ಮಾದರಿ ಜಾತ್ರೆಯೆನಿಸಿದ ಐತಿಹಾಸಿಕ ಗದುಗಿನ ತೋಂಟದಾರ್ಯ ಮಹಾರಥೋತ್ಸವವು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಮಂಗಳವಾರ ಸಂಜೆ 6:30 ಕ್ಕೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯಾತ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಅಡ್ಡಪಲ್ಲಕ್ಕಿಯಲ್ಲಿ ಬಸವಣ್ಣನವರ ಹಾಗೂ ಸಿದ್ಧಲಿಂಗೇಶ್ವರರ ಭಾವಚಿತ್ರ, ವಚನದ ಕಟ್ಟುಗಳನ್ನು ಇಟ್ಟು ಮೆರವಣಿಗೆ ಮಾಡಲಾಯಿತು. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಾವಿರಾರು ಭಕ್ತರೊಂದಿಗೆ ಮೆರವಣಿಗೆಯೊಂದಿಗೆ ನಡೆದುಕೊಂಡು ಬಂದರು.ಡಾ.ಸಾರಂಗಧರ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಸಾರಂಗಮಠ ಶ್ರೀಶೈಲ ಹಾಗೂ ಸುಲಫಲಮಠ, ಕಲಬುರ್ಗಿ, ಗುರುಮಹಾಂತ ಮಹಾಸ್ವಾಮಿಗಳು, ವಿಜಯಮಹಾಂತೇಶ್ವರ ಮಠ, ಚಿತ್ತರಗಿ-ಇಲಕಲ್ಲ, ಡಾ.ಶಿವಾನಂದ ಮಹಾಸ್ವಾಮಿಗಳು ವಿರಕ್ತಮಠ, ಸೊನ್ನ ಭೈರನಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಮಹಾಸ್ವಾಮಿಗಳು, ಕೆಂಚಬಸವ ಶಿವಾಚಾರ್ಯ ಸ್ವಾಮಿಗಳು ರೋಜಾ ಹಿರೇಮಠ, ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು, ಹರ್ಲಾಪೂರದೇವರು ಮುಂತಾದವರು ಭಾಗವಹಿಸಿದ್ದರು.10 ಕ್ಕೂ ಹೆಚ್ಚು ಸಾಂಸ್ಕೃತಿಕ ಕಲಾತಂಡಗಳು ಮೆರವಣಿಗೆಯುದ್ದಕ್ಕೂ ಪಾಲ್ಗೊಂಡವು.
ರಥೋತ್ಸವಕ್ಕೆ ಮುನ್ನ ಪರಂಪರೆಯಂತೆ ವೀರನಾರಾಯಣ ರಸ್ತೆಯಲ್ಲಿರುವ ಎಸ್.ಎಸ್. ಕಳಸಾಪೂರಶೆಟ್ರ ನಿವಾಸದಿಂದ ಮೆರವಣಿಗೆಯಲ್ಲಿ ಕಾಲ್ನಡಿಗೆಯ ಮೂಲಕ ಡಾ. ತೋಂಟದ ಸಿದ್ಧರಾಮ ಶ್ರೀಗಳು ಶ್ರೀಮಠಕ್ಕೆ ಆಗಮಿಸಿದರು. ರಸ್ತೆಯುದ್ದಕ್ಕೂ ಹಿಂದೂ,ಮುಸ್ಲಿಂ ಸೇರಿದಂತೆ ಎಲ್ಲ ಸಮುದಾಯದವರು ಬಸವೇಶ್ವರ ಮತ್ತು ಸಿದ್ಧಲಿಂಗೇಶ್ವರ ವಚನಕಟ್ಟುಗಳಿಗೆ ಹಾಗೂ ಪೂಜ್ಯರಿಗೆ ಗೌರವ ಸಲ್ಲಿಸಿದರು. ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಮತ್ತು ಮೆರವಣಿಗೆ ತಂಡಗಳಿಗೆ ವರ್ತಕರು ಕುಡಿಯಲು ತಂಪುಪಾನೀಯ ವಿತರಿಸಿದ್ದು ಐಕ್ಯತೆಯ ಸಂದೇಶವನ್ನು ಸಾರಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.