ಲಕ್ಷ್ಮೇಶ್ವರ: ಪಟ್ಟಣದ ಸೋಮೇಶ್ವರ ತೇರಿನ ಆವರಣದಲ್ಲಿ ನ. ೩ರಂದು ಬೆಳಗ್ಗೆ ೧೦ಕ್ಕೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕರ ಜಯಂತಿ ನಡೆಯಲಿದೆ.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕರಡಿ ಮಾತನಾಡಿ, ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಡಾ. ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಾಸಕ ಡಾ. ಚಂದ್ರು ಲಮಾಣಿ, ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಅಧ್ಯಕ್ಷೆ ವಹಿಸಿಕೊಳ್ಳುವರು ಎಂದು ತಿಳಿಸಿದರು.
ಸಮಾಜದ ಮುಖಂಡ ಎನ್.ಎನ್. ನೆಗಳೂರ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಚಿತ್ರನಟ ಕಿಚ್ಚ ಸುದೀಪ ಆಗಮಿಸುವರು. ಡಾ. ಪ್ರಭುರಾಜ ಕೆ.ಎನ್. ಉಪನ್ಯಾಸ ನೀಡುವರು ಎಂದು ಹೇಳಿದರು.ಸಂಘದ ಯುವ ಮುಖಂಡ ಪ್ರಕಾಶ ಬೆಂತೂರ ಮಾತನಾಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಾಲ್ಮೀಕಿ ಮತ್ತು ವೀರ ಮದಕರಿ ನಾಯಕರ ಭಾವಚಿತ್ರಗಳ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಂದ ಕಲಾವಿದರಿಂದ ಕಲಾ ಪ್ರದರ್ಶನ ನಡೆಯುವುದು. ನೂರಾರು ಮಹಿಳೆಯರ ಕುಂಭದೊಂದಿಗೆ ಭಾಗವಹಿಸುವರು. ತೇರಿನ ಮನೆಯಿಂದ ಆರಂಭವಾಗುವ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.