ನಾಳೆ ದೆಹಲಿಯಲ್ಲಿ ದೇಶದ ರೈತರ ಮಹಾಸಂಗಮ ರ್‍ಯಾಲಿ: ಕುರುಬೂರು ಶಾಂತಕುಮಾರ್

KannadaprabhaNewsNetwork | Published : Jan 12, 2024 1:46 AM

ದೇಶದ ರೈತರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು. ಕಬ್ಬಿನ ಎಫ್ಆರ್ ಪಿ ದರವನ್ನು ಕನಿಷ್ಠ 4000 ರು.ಗೆ ಏರಿಕೆ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10000 ರು. ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರುದೇಶದ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾಕಾಗಿ ಒತ್ತಾಯಿಸಲು ದೆಹಲಿಯಲ್ಲಿ ಫೆ.13 ರಂದು ದೇಶದ ಎಲ್ಲಾ ರೈತ ಸಂಘಟನೆಗಳ ಮಹಾಸಂಗಮ ರ್‍ಯಾಲಿ ನಡೆಯಲಿದೆ. ಈಗಾಗಲೇ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶದ ವಿವಿಧ ರಾಜ್ಯಗಳಲ್ಲಿ 14 ಕಿಸಾನ್ ಮಹಾ ಪಂಚಾಯತ್ ಸಮಾವೇಶಗಳ ನಡೆಸಿ ರೈತರ ಜಾಗೃತಿ ಮೂಡಿಸಲಾಗಿದೆ ಎಂದು ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ ಪ್ರಧಾನಿಯವರು ಭರವಸೆ ನೀಡಿ ಹುಸಿಗೊಳಿಸಿದ್ದಾರೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿಗಾಗಿ, ಕೃಷಿ ಉತ್ಪನ್ನಗಳಿಗೆ ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ದೇಶದ ರೈತರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು. ಕಬ್ಬಿನ ಎಫ್ಆರ್ ಪಿ ದರವನ್ನು ಕನಿಷ್ಠ 4000 ರೂ.ಗೆ ಏರಿಕೆ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10000 ರೂ. ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು. ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿ ಆಗಬೇಕು ಎಂಬ ಒತ್ತಾಯಗಳನ್ನು ಮಾಡಲಾಗುವುದು ಎಂದರು.

ಬಣ್ಣಾರಿ ಸಕ್ಕರೆ ಕಾರ್ಖಾನೆ ಸರ್ಕಾರ ವಶಕ್ಕೆ ಪಡೆಯಲಿ:

ಮುಖ್ಯಮಂತ್ರಿಯವರ ಕ್ಷೇತ್ರದಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ರಹದಾರಿ ನಿಯಮಗಳನ್ನು ಉಲ್ಲಂಘಿಸಿ ಸರ್ಕಾರಕ್ಕೆ ಹಾಗೂ ರೈತರಿಗೆ ಹಲವಾರು ವಿಧದಲ್ಲಿ ಸುಳ್ಳು ಮಾಹಿತಿ ವರದಿ ಸಲ್ಲಿಸಿ ವಂಚಿಸುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕೂಡಲೇ ದಕ್ಷ ಅಧಿಕಾರಿಗಳ ತಂಡ ರಚಿಸಿ ತನಿಖೆ ನಡೆಸಿ ಸಕ್ಕರೆ ಕಾರ್ಖಾನೆಯನ್ನು ಸರ್ಕಾರದ ವಶಕ್ಕೆ ಪಡೆದು ರೈತರಿಗೆ ನ್ಯಾಯ ಕೊಡಿಸಬೇಕು ಎಂದು ಅವರು ಒತ್ತಾಯಿಸಿದರು.

ಸಹಕಾರಿ ವ್ಯವಸ್ಥೆಯಲ್ಲಿರುವ ಎಪಿಎಂಸಿ, ಸಹಕಾರಿ ಬ್ಯಾಂಕುಗಳು, ಹಾಲು ಉತ್ಪಾದಕರ ಸಂಸ್ಥೆಗಳ ಕಾರ್ಯ ನಿರ್ವಹಣೆಯಲ್ಲಿ ಸರ್ಕಾರದ ನಾಮನಿರ್ದೇಶನ ಪ್ರತಿನಿಧಿಗಳನ್ನು ನೇಮಿಸುವುದನ್ನು ಕೈ ಬಿಡಬೇಕು. ಸಂಸ್ಥೆಗಳು ದುರ್ಬಲವಾಗಲು ರಾಜಕೀಯ ಪ್ರವೇಶ ಕಾರಣವಾಗಿದೆ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರಾದ ಅತ್ತಹಳ್ಳಿ ದೇವರಾಜ್, ಪಿ. ಸೂಮಶೇಖರ್, ಬರಡನಪುರ ನಾಗರಾಜ್, ಕಿರಗಸೂರ ಶಂಕರ, ರಂಗರಾಜು, ಮಾರ್ಬಳ್ಳಿ ನೀಲಕಂಠಪ್ಪ, ಬಸವರಾಜು, ಗೌರಿಶಂಕರ್, ವೆಂಕಟೇಶ, ನಾಗೇಶ, ಪಟೇಲ್ ಶಿವಮೂರ್ತಿ, ರೇವಣ್ಣ, ಶಿವಣ್ಣ ಮೊದಲಾದವರು ಇದ್ದರು.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಜ.24 ರಂದು ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ಇಂದಿನ ಮಾಧ್ಯಮ ಹಾಗೂ ಪ್ರಜಾತಂತ್ರ ವ್ಯವಸ್ಥೆ ಕುರಿತು ವಿಚಾರ ಗೋಷ್ಠಿ ಆಯೋಜಿಸಲಾಗಿದ್ದು, ನಿವೃತ್ತ ನ್ಯಾಯಾಧೀಶರು, ಸಮಾಜ ಚಿಂತಕರು, ಮಾಧ್ಯಮ ಕ್ಷೇತ್ರದ ಚಿಂತಕರು ಗೋಷ್ಠಿಯಲ್ಲಿ ಭಾಗವಹಿಸಿ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.

- ಕುರುಬೂರು ಶಾಂತಕುಮಾರ್, ರಾಜ್ಯಾಧ್ಯಕ್ಷ, ಕಬ್ಬು ಬೆಳೆಗಾರರ ಸಂಘ