ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮೇಯರ್
ಮಹಾವೀರ ಜಯಂತಿ ಕೇವಲ ಧಾರ್ಮಿಕ ಹಬ್ಬವಲ್ಲ. ಬದಲಾಗಿ ಕರುಣೆ, ನೈತಿಕತೆ ಮತ್ತು ಅಹಿಂಸೆಯನ್ನು ಪ್ರತಿಬಿಂಬಿಸುವ ದಿನವಾಗಿದ್ದು, ಸತ್ಯ, ಕ್ಷಮೆ ಮತ್ತು ಭೌತಿಕತೆಯಿಂದ ನಿರ್ಲಿಪ್ತತೆಯ ಮಾರ್ಗವನ್ನು ಅನುಸರಿಸುವ ಮೂಲಕ ಸರಳ ಮತ್ತು ಶಾಂತಿಯುತ ಜೀವನವನ್ನು ನಡೆಸಲು ಕಲಿಸುತ್ತದೆ ಎಂದು ಮೇಯರ್ ಮುಲ್ಲಂಗಿ ನಂದೀಶ್ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ತೇರುಬೀದಿ ರಸ್ತೆಯ ಶ್ರೀ ಪಾರ್ಶ್ವನಾಥ ಭವನ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.ಮಹಾವೀರರು ತಮ್ಮ 30ನೇ ವಯಸ್ಸಿನಲ್ಲಿ ಜ್ಞಾನೋದಯವನ್ನು ಹುಡುಕುತ್ತಾ ತಮ್ಮ ಐಷಾರಾಮಿ ಜೀವನ ತ್ಯಜಿಸಿ 12 ವರ್ಷಗಳ ತೀವ್ರ ಧ್ಯಾನ ಮತ್ತು ತಪಸ್ಸಿನ ನಂತರ, ಅವರು ಕೇವಲ ಜ್ಞಾನ ಪಡೆದು ತಮ್ಮ ಜೀವನದ ಉಳಿದ ಭಾಗವನ್ನು ಅಹಿಂಸೆ, ಸತ್ಯ ಮತ್ತು ಸ್ವಯಂ-ಶಿಸ್ತಿನ ಬೋಧನೆಗಳನ್ನು ಹರಡಲು ಕಳೆದರು ಎಂದು ಮಹಾವೀರರ ಜೀವನದ ಬಗ್ಗೆ ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಕೆ.ಸುಧಾ ತಂಡದವರು ಭಗವಾನ್ ಮಹಾವೀರರ ಕುರಿತ ಭಕ್ತಿ ಗೀತೆಗಳನ್ನು ಪ್ರಸ್ತುತ ಪಡಿಸಿದರು ಮತ್ತು ಜೈನ ಸಮುದಾಯದ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನಡೆಯಿತು.
ಮಹಾವೀರ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆ ನಗರದ ಶ್ರೀ ಪಾರ್ಶ್ವನಾಥ್ ಭವನದಿಂದ ಆರಂಭವಾಗಿ ತೇರು ಬೀದಿ, ಕಾಳಮ್ಮ ಬೀದಿ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ ರಸ್ತೆ ಮೂಲಕ ಶ್ರೀ ಪಾರ್ಶ್ವನಾಥ್ ಭವನ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.