ನಾಗಮಂಗಲ: ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಂತರ ಟಿ.ಮರಿಯಪ್ಪ ವೃತ್ತದಲ್ಲಿ ಕೆಲಹೊತ್ತು ಮಾನವ ಸರಪಳಿ ನಿರ್ಮಿಸಿ , ಮಹಿಳೆಯರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ಈ ಜಿಲ್ಲೆಯಿಂದ ತೊಲಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಕೆಲಕಾಲ ಧರಣಿ ನಡೆಸಿ, ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂಬ ಹೇಳಿಕೆ ನೀಡುವ ಮೂಲಕ ನಾಡಿನ ಎಲ್ಲ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್,ಮುಖಂಡರಾದ ಪುಟ್ಟಮ್ಮ ಮಾಯಣ್ಣಗೌಡ, ಕಾಂತಾಪುರ ಗ್ರಾಪಂ ಮಾಜಿ ಅಧ್ಯಕ್ಷೆ ನೀಲಾ ಶಿವಮೂರ್ತಿ, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎನ್.ಕೆ.ವಸಂತಮಣಿ, ಪುರಸಭೆ ಮಾಜಿ ಸದಸ್ಯೆ ಗೀತಾ ದಾಸೇಗೌಡ, ಜಿಪಂ ಮಾಜಿ ಸದಸ್ಯೆ ಸಾವಿತ್ರಮ್ಮ, ಚಿಣ್ಯ ದೀಪಿಕಾ, ಭವ್ಯಶ್ರೀ ಗಂಗಾಧರ್ ಮಾತನಾಡಿದರು. ಬಳಿಕ ತಹಸೀಲ್ದಾರ್ ನಯೀಂಉನ್ನೀಸಾ ಅವರಿಗೆ ಮನವಿಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟರು.