ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಇತ್ತೀಚೆಗೆ ಹೆಚ್ಚಿನ ಮಹತ್ವ ಪಡೆಯುತ್ತಿರುವ ಯಾವುದೇ ಅಡ್ಡಪರಿಣಾಮಗಳಿಲ್ಲದ ಆಯುಷ್ ಚಿಕಿತ್ಸೆ ಮತ್ತು ಔಷಧಗಳನ್ನು ಬಳಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.ಪಟ್ಟಣದ ಚನ್ನರಾಯಪಟ್ಟಣ-ಮೈಸೂರು ಮುಖ್ಯ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಆಯುಷ್ ಇಲಾಖೆ ಹಾಗೂ ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಮ್ಮ ಪೂರ್ವಿಕರು ಕೂಡ ಆಯುಷ್ ಪದ್ಧತಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆ ದಿನಗಳಲ್ಲಿ ಹೆಚ್ಚಿನ ಪ್ರಚಾರ ಸಿಗದ ಕಾರಣ ಬಳಕೆ ಕಡಿಮೆಯಾಗಿತ್ತು. ಈಗ ಬಳಕೆ ದಿನೇ ದಿನೇ ಹೆಚ್ಚುತ್ತಿದೆ ಎಂದರು.
ಆಯುಷ್ ವೈದ್ಯರು ಹೆಚ್ಚಿನ ಅಧ್ಯಯನ ಮಾಡಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಆಯುಷ್ ಪದ್ಧತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತ ಹಲವಾರು ಔಷಧಗಳು ಲಭ್ಯವಿದ್ದು ಸಾರ್ವಜನಿಕರು ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಬದಲಾಗಬೇಕು. ಸರ್ಕಾರ ಕೂಡ ಈ ಪದ್ಧತಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ವೈದ್ಯರು ಶ್ರಮವಹಿಸುತ್ತಿದ್ದಾರೆ. ಆಯುಷ್ ಚಿಕಿತ್ಸೆ ಪಡೆಯುವುದು ಎಷ್ಟು ಮುಖ್ಯವೋ ಚಿಕಿತ್ಸೆ ನಂತರ ವೈದ್ಯರ ಸಲಹೆ ಪಾಲಿಸುವುದು ಅಷ್ಟೇ ಮುಖ್ಯ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್.ಸೀತಾಲಕ್ಷ್ಮಿ ಔಷಧಿಗಳನ್ನು ಬಳಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ವಸತಿ ನಿಲಯದ ನೂರಕ್ಕೂ ಅಧಿಕ ಮಕ್ಕಳಿಗೆ ಆಯುಷ್ ಚವನ್ ಪ್ರಾಶ್, ಹೇರ್ ಆಯಿಲ್ ಮತ್ತು ಟೂತ್ ಪೇಸ್ಟ್ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಆಯುಷ್ ವೈದ್ಯರಾದ ಡಾ.ಎಂ.ಲೋಕೇಶ್, ಡಾ.ಎಚ್. ಪಿ. ಚಂದ್ರಶೇಖರ್, ಡಾ.ದಿವ್ಯ, ಡಾ.ಎಸ್.ಸುಬ್ರಹ್ಮಣ್ಯ ಸೇರಿದಂತೆ ಹಲವರಿದ್ದರು.