ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕ ಎಚ್.ಟಿ.ಮಂಜು ಭೂಮಿ ಪೂಜೆ ನೆರವೇರಿಸಿದರು.ತಾಲೂಕಿನ ಚಟ್ಟಂಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1 ಕೋಟಿ ರು. ವೆಚ್ಚದಲ್ಲಿ ನೂತನ ರಸ್ತೆ ಕಾಮಗಾರಿ, ರಾಜಘಟ್ಟ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 60 ಲಕ್ಷ ರು. ಹಾಗೂ ಕೆ.ಜಿ.ಕೋಡಿಹಳ್ಳಿ ಗ್ರಾಮದಲ್ಲಿ ಕೆಆರ್ಐಡಿಎಲ್ ಇಲಾಖೆಯಿಂದ 20 ಲಕ್ಷ ರು. ವೆಚ್ಚದಲ್ಲಿ ನೂತನ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ಬಳಿಕ ಮಾತನಾಡಿ, ಗುತ್ತಿಗೆದಾರರು ಕಾಮಗಾರಿಗಳ ಗುಣಮಟ್ಟವನ್ನು ಕಾಪಾಡಿಕೊಂಡು ಉತ್ತಮ ಕೆಲಸ ನಿರ್ವಹಿಸಬೇಕು. ನಾನು ಗುಣಮಟ್ಟದಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ ಎಂದರು.ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಯದೇ ಇದ್ದಲ್ಲಿ ತಕ್ಷಣ ಅದನ್ನು ವಿರೋಧಿಸಬೇಕು. ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದರೆ ತಕ್ಷಣ ನನ್ನ ಗಮನಕ್ಕೆ ತಂದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಪಾರಸ್ಸು ಮಾಡಿ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ಕೆಲಸ ಮಾಡುತ್ತೇನೆ ಎಂದರು.
ರಾಜ್ಯ ಸರ್ಕಾರವು ಶೇ.90 ರಷ್ಟು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಇದರಿಂದ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಅಷ್ಟೋ ಇಷ್ಟೋ ನೀಡುತ್ತಿರುವ ಅನುದಾನದಲ್ಲಿ ಹಂತ ಹಂತವಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂದರು.ಪ್ರಮುಖವಾಗಿ ರಸ್ತೆ ಅಭಿವೃದ್ಧಿ, ವಸತಿ ಯೋಜನೆ, ನೀರಾವರಿ ಯೋಜನೆ, ಒಡೆದಿರುವ ಕೆರೆ ಕಟ್ಟೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಪದೇ ಪದೇ ಮನವಿ ಮಾಡಿದರೂ ಸಹ ರಾಜ್ಯ ಸರ್ಕಾರವು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ವೇಳೆ ತಾಲೂಕು ಜೆಡಿಎಸ್ ಮುಖಂಡರಾದ ಅಜಯ್ ರಾಮೇಗೌಡ, ಬೇಲದಕೆರೆ ಮರೀಗೌಡ, ಕೃಷ್ಣೇಗೌಡ, ಶೀಳನೆರೆ ಪಿಡಿಒ ನವೀನ್ಕುಮಾರ್, ಶೀಳನೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸ್ವಾಮೀಗೌಡ, ಪುರಸಭಾ ಸದಸ್ಯ ಕೆ.ಕೆ.ರಮೇಶ್, ಗ್ರಾಪಂ ಸದಸ್ಯರಾದ ಶ್ರೀನಿವಾಸ್, ಶಿಲ್ಪಶೇಖರ್, ದೇವರಾಜೇಗೌಡ, ಗಿರೀಶ್, ಕದರೇಗೌಡ, ಗುತ್ತಿಗೆದಾರರಾದ ಸ್ನೇಹಿತ ರಮೇಶ್, ರೇವಣ್ಣ, ಸ್ವಾಮೀಗೌಡ, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್, ಧ್ರುವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.