ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ವೆಂಕಟರೆಡ್ಡಿ ಅವರ ನೇತೃತ್ವದಲ್ಲಿ ನಗರದ ಜೈ ಭೀಮ್ ಹಾಸ್ಟೆಲ್ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿಯಿಂದ ಮೆರವಣಿಗೆ ಆರಂಭಿಸಿದ ಮುಖಂಡರು, ವಿವಿಧ ರಸ್ತೆಗಳಲ್ಲಿ ಸಂಚರಿಸಿ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಬಳಿಕ ಎಸ್.ಎನ್. ನಾರಾಯಣಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡುವಂತೆ ಎಐಸಿಸಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸುರ್ಜೇವಾಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಲಗೈ ಜಾತಿಗಳ ಒಕ್ಕೂಟದ ಕಾರ್ಯದರ್ಶಿ ವೆಂಕಟರೆಡ್ಡಿ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಈ ಸಮುದಾಯದ ಪ್ರತಿನಿಧಿಯಾಗಿರುವ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆಯೇ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಅವಕಾಶ ಬಂದಿದ್ದು, ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಮುಂದೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸುವ ಬಗ್ಗೆ ಸಮುದಾಯ ಯೋಚಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ನಮ್ಮ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ ನ್ಯಾಯ ಒದಗಿಸಿದರೆ ಕಾಂಗ್ರೆಸ್ ಪಕ್ಷದೊಂದಿಗೆ ಸಮುದಾಯ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದರು.ಬಲಗೈ ಜಾತಿಗಳ ಜಿಲ್ಲಾ ಸಲಹಾ ಸಮಿತಿಯ ಏಡುಕೋಂಡಲು ಶ್ರೀನಿವಾಸಪ್ಪ ಮಾತನಾಡಿ, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ನಮ್ಮ ಜನಾಂಗವನ್ನು ಪ್ರತಿನಿಧಿಸುವ ಪ್ರಾಮಾಣಿಕ ಸರಳತೆ ಹೆಸರು ವಾಸಿ ಆಗಿರುವ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲೆಯ ಎಲ್ಲ ತಾಲೂಕುಗಳ ಬಲಗೈ ಜನಾಂಗದ ಒತ್ತಾಯವಾಗಿದೆ ಎಂದು ತಿಳಿಸಿದರು.
ಸಿಕೆಬಿ-2 ನಗರದ ಅಂಬೇಡ್ಕರ್ ವೃತ್ತದಲ್ಲಿ ಬಲಗೈ ಜಾತಿಗಳ ಒಕ್ಕೂಟದಿಂದ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೃಹತ್ ಸಾಮರಸ್ಯ ಚಳವಳಿ ನಡೆಸಿದರು.