ಕನ್ನಡಪ್ರಭ ವಾರ್ತೆ ವಿಜಯಪುರ
ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ ಕಳೆದ ನ.೨ಕ್ಕೆ ೫೦ ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ಜ.೨೭ ರಿಂದ ಫೆ.೧೨ ರವರೆಗೆ ಜಿಲ್ಲೆಯಾದ್ಯಂತ ಜ್ಯೋತಿ ಹೊತ್ತ ರಥಯಾತ್ರೆ ನಡೆಯಲಿದ್ದು, ಸಂಭ್ರಮದ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ್ ಮುರಗಿ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜ್ಯೋತಿ ರಥಯಾತ್ರೆಗೆ ಸ್ವಾಗತ ಮತ್ತು ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಜ್ಯೋತಿ ಯಾತ್ರೆ ಸಂದರ್ಭದಲ್ಲಿ ವಿವಿಧ ಕಲಾ ತಂಡಗಳ ಮತ್ತು ಯಾತ್ರೆಗೆ ಸಂಬಂಧಿಸಿದ ತಾಲೂಕುವಾರು ರೂಟ್ ಮ್ಯಾಪ್ ಸಿದ್ಧಪಡಿಸಿ, ವಿವಿಧ ಸ್ಥಳಗಳ ಮೂಲಕ ಜ್ಯೋತಿಯಾತ್ರೆ ಹೋಗುವ ಪಟ್ಟಿಯನ್ನು ಸಿದ್ಧಪಡಿಸಿ ಸಭೆ ನಡೆಸಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಜ್ಯೋತಿಯಾತ್ರೆ ಸಂದರ್ಭದಲ್ಲಿ ಸಂಭ್ರಮದ ಸ್ವಾಗತ, ವಿವಿಧ ಸಾಂಸ್ಕೃತಿಕ, ಐತಿಹಾಸಿಕ, ಸ್ಥಳೀಯ ಕಲೆಗಳ ಪ್ರೋತ್ಸಾಹ ಒಳಗೊಂಡ ಕಾರ್ಯಕ್ರಮಗಳ ಮೂಲಕ ಯಾತ್ರೆ ಸಂಚರಿಸುವಂತೆ ನೋಡಿಕೊಳ್ಳಬೇಕು ಎಂದರು.
ರಥಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರನ್ನು ಆಹ್ವಾನಿಸಬೇಕು. ಸಾರ್ವಜನಿಕರು, ಜನಪ್ರತಿನಿಧಿಗಳು, ಸಾಹಿತಿಗಳು, ಅಧಿಕಾರಿ ಸಿಬ್ಬಂದಿ, ಕಲಾವಿದರು, ಕನ್ನಡಪರ ಸಂಘಟನೆಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಲು ಸಮನ್ವಯತೆಯಿಂದ ಯೋಜನಾ ಬದ್ಧವಾದ ಜ್ಯೋತಿಯಾತ್ರೆಯ ರೂಪುರೇಷ ಯೋಜನೆ ಸಿದ್ಧಪಡಿಸಬೇಕು ಎಂದರು.ಕನ್ನಡ ಜ್ಯೋತಿ ಯಾತ್ರೆ ಬಸವ ಕಲ್ಯಾಣದಿಂದ ಆಗಮಿಸಲಿದ್ದು, ಜ.೨೭ರಂದು ಆಲಮೇಲ ತಾಲೂಕಿನ ಗಡಿಯಲ್ಲಿ ಸ್ವಾಗತಿಸಿ, ಪಟ್ಟಣ ಹಾಗೂ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಯಶಸ್ವಿಗೊಳಿಸಬೇಕು. ಅದರಂತೆ ವಿವಿಧ ಹೋಬಳಿ ಹಾಗೂ ಗ್ರಾಮ ಪಂಚಾಯತಿಗಳ ಹಾಗೂ ತಾಲೂಕಿನ ಗಡಿಭಾಗದ ವರೆಗಿನ ಮಾರ್ಗಗಳ ಮಧ್ಯದಲ್ಲಿ ಗೌರವಯುತವಾಗಿ ಈ ಜ್ಯೋತಿ ಯಾತ್ರೆಗೆ ಬರಮಾಡಿಕೊಳ್ಳುವ ಮತ್ತು ಬೀಳ್ಕೊಡುವ ವ್ಯವಸ್ಥೆ ಮಾಡಬೇಕು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದರು.
ಈ ಸಭೆಯಲ್ಲಿ ಎಲ್ಲ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಹಾಗೂ ತಾಲೂಕಿನ ತಹಸೀಲ್ದಾರ್, ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.