ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಪಾಲಕರ ಮತ್ತು ಪೋಷಕರ ಸಂರಕ್ಷಣಾ ಕಾಯ್ದೆಯ ಅನುಷ್ಠಾನ, ವಿಕಲಚೇತನರ ಪುನರ್ವಸತಿ ಕೇಂದ್ರದ ಯೋಜನೆಯ ಜಿಲ್ಲಾ ಸಮನ್ವಯ ಸಮಿತಿ ಸಭೆ ಹಾಗೂ ವಿಕಲಚೇತನರ ಕುಂದುಕೊರತೆಗಳ ನಿವಾರಣಾ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ಬಸ್ಗಳಲ್ಲಿ ನಿಗದಿ ಪಡಿಸಿದ ಆಸನಗಳಲ್ಲಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗಾಗಿ ಕುಳಿತು ಪ್ರಯಾಣಿಸಲು ನಿರ್ವಾಹಕರು ಅವಕಾಶ ಕಲ್ಪಿಸಿ ಕೊಡಬೇಕು. ಈ ಕುರಿತು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಬಸ್ ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದರು.ಈ ವೇಳೆ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿರುವ ಹಿರಿಯ ನಾಗರಿಕರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಪಕ್ಷಗಾರರ ಮನ ಒಲಿಸಬೇಕು. ಪೊಷಕರ ನಿರ್ವಹಣೆಗೆ ಹಣ ನೀಡುವಂತೆ ಆದೇಶ ಮಾಡಿದರು, ಕೆಲ ಮಕ್ಕಳು ಆದೇಶ ಪಾಲನೆ ಮಾಡುತ್ತಿಲ್ಲ. ಈ ಕುರಿತು ಹಿರಿಯ ನಾಗರಿಕರು ಪುನಃ ಕಚೇರಿಗೆ ಅಲೆಯುವಂತಾಗಿದೆ. ಹಿರಿಯ ನಾಗರಿಕರ ಕಲ್ಯಾಣಧಿಕಾರಿಗಳು ನಿರ್ವಹಣೆ ನೀಡಿದ ಆದೇಶಗಳು ಜಾರಿಯಾಗುವಂತೆ ಕ್ರಮ ವಹಿಸಬೇಕು. ನಗರದಲ್ಲಿ ಕಾಯ್ದೆಯಡಿ ನೋಂದಣಿಯಾಗದೆ ಕಾರ್ಯಚರಣೆ ನಡೆಸುತ್ತಿರುವ ವೃದ್ಧಾಶ್ರಮಗಳ ನೊಂದಣಿ ಕ್ರಮ ವಹಿಸಬೇಕು. ಸಂಧ್ಯಾ ಸುರಕ್ಷಾ ಯೋಜನೆಯಡಿ 800 ರು.ಪಿಂಚಣಿ ಪಡೆಯುತ್ತಿರುವ 60ವರ್ಷ ಮೇಲ್ಪಟ್ಟವರಿಗೆ 65 ವರ್ಷ ದಾಟಿದ ನಂತರ 1,200 ರು. ನೀಡಲು ಸರ್ಕಾರ ಆದೇಶ ನೀಡಲು ಪಿಂಚಣಿ ಅದಾಲತ್ಗಳ ಮೂಲಕ ಹಿರಿಯ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದರು.
ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶೇ.5ರಷ್ಟು ಅನುದಾನವನ್ನು ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಲು ಸ್ಪಷ್ಟ ನಿರ್ದೇಶನವಿದೆ. ಆದರೆ ಗ್ರಾಮ ಪಂಚಾಯಿತಿಗಳು ಅನುದಾನ ಬಳಕೆ ಮಾಡುತ್ತಿಲ್ಲ. ವಿಕಲಚೇತನರಿಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ. ಕೂಡಲೇ ಅಧಿಕಾರಿಗಳು ಅನುದಾನ ಬಳಕೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ನಿರ್ದೇಶನ ನೀಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಅನುದಾನಿತ ವೃದ್ಧಾಶ್ರಮಗಳು ಕಾರ್ಯನಿರ್ವಹಿಸುತ್ತಿವೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ವರ್ಷ ಮೇಲ್ಪಟ್ಟ 42,198 ಫಲಾನುಭವಿಗಳು 800 ರು. ಹಾಗೂ 65 ವರ್ಷ ಮೇಲ್ಪಟ್ಟ 1,10,475 ಫಲಾನುಭವಿಗಳು 1200 ರು. ಪಿಂಚಣಿ ಪಡೆಯುತ್ತಿದ್ದಾರೆ. ಹಿರಿಯ ನಾಗರಿಕರಿಗೆ ಸಂಬಂಧಿಸಿದಂತೆ ಜನವರಿ ಅಂತ್ಯಕ್ಕೆ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 35 ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 19 ಪ್ರಕರಣಗಳು ದಾಖಲಾಗಿವೆ. 2011 ಜನಗಣತಿ ಅನುಸಾರ ಜಿಲ್ಲೆಯಲ್ಲಿ 35,971 ವಿಕಲಚೇತನರು ಇದ್ದು, 35,074 ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ನೀಡಲಾಗಿದೆ.