ಯಲಬುರ್ಗಾ: ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೆ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ತಹಸೀಲ್ದಾರ್ ಬಸವರಾಜ ತೆನ್ನೆಳ್ಳಿ ಹೇಳಿದರು.
ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಅಮೂಲ್ಯವಾಗಿದೆ, ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಿದರೆ ಸಾಲದು ಪ್ರತಿಯೊಬ್ಬ ಪಾಲಕರು ಮನೆಯಲ್ಲಿ ಮಕ್ಕಳು ಯಾವ ಹಂತದಲ್ಲಿ ಕಲಿಕೆ ಪಡೆಯುತ್ತಿದ್ದಾರೆ ಎನ್ನುವುದರ ಬಗ್ಗೆ ಹೆಚ್ಚು ಗಮನಹರಿಸಿದಾಗ ಹೆತ್ತವರ ಕೀರ್ತಿ ತರುವಂತಹ ಮಕ್ಕಳಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ ಮಾತನಾಡಿ, ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶ್ರಮಿಸಬೇಕು. ಶಾಲೆಗಳಲ್ಲಿ ಕೇವಲ ಅಂಕ ಗಳಿಕೆ ಮಾತ್ರ ಪರಿಗಣನೆಯಾದರೆ ಸಾಲದು. ನಡೆ, ನುಡಿ, ಮಾನವೀಯ ಮೌಲ್ಯ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಸಿಪಿಐ ಮೌನೇಶ್ವರ ಮಾಲಿಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಓದಿದಾಗ ಜೀವನದಲ್ಲಿ ಏನಾದರು ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು.