ಕುಷ್ಟಗಿ: ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಮನಸ್ಥಿತಿ ಪ್ರತಿಯೊಬ್ಬರೂ ಬದಲಿಸಿಕೊಂಡು ಸ್ವಚ್ಛತೆ ಕೇವಲ ಅಭಿಯಾನಕ್ಕೆ ಸೀಮಿತಗೊಳಿಸದೇ ತಮ್ಮ ದೈನಂದಿನ ಬದುಕಿನ ಅವಿಭಾಜ್ಯ ಭಾಗವನ್ನಾಗಿಸಿಕೊಳ್ಳಬೇಕು. ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ತಾಪಂ ಇಒ ಅಮರೇಶ್ ಕರೆ ನೀಡಿದರು.
ಸ್ವಚ್ಛತೆ ಎಂದರೆ ಕೇವಲ ಮನೆ, ಕಚೇರಿ ಅಥವಾ ವೈಯಕ್ತಿಕ ಸ್ವಚ್ಛತೆಗೆ ಸೀಮಿತವಾದ ವಿಚಾರವಲ್ಲ. ನಮ್ಮ ಸುತ್ತಲಿನ ಪರಿಸರ, ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ ಹಾಗೂ ಗ್ರಾಮಗಳ ಸ್ವಚ್ಛತೆಯೂ ಅಷ್ಟೇ ಮುಖ್ಯ. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಕಾಪಾಡುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಮನೆಗಳಲ್ಲಿ ಕಸ ವ್ಯವಸ್ಥಿತವಾಗಿ ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುವುದಲ್ಲದೆ, ಸೊಳ್ಳೆ, ನೊಣ ಸೇರಿದಂತೆ ರೋಗ ಹರಡುವ ಕೀಟಗಳ ಉತ್ಪತ್ತಿಗೆ ಕಾರಣವಾಗುತ್ತದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಸ್ವಚ್ಛತೆಯ ವಿಚಾರದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಬೇಕು ಎಂದು ಹೇಳಿದರು.ಸಾರ್ವಜನಿಕ ಸ್ಥಳಗಳಲ್ಲಿ ಕಸ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಕಸದ ಬುಟ್ಟಿ ಬಳಸುವುದು, ತ್ಯಾಜ್ಯ ವಿಂಗಡಿಸಿ ವಿಲೇವಾರಿ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ಕಡಿಮೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ಎಚ್.ಮಾತನಾಡಿ ಸ್ವಚ್ಛತಾ ಕಾರ್ಯ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ ನಿರಂತರವಾಗಿ ನಡೆಸಬೇಕು. ಗ್ರಾಮಗಳ ಸಾರ್ವಜನಿಕ ಸ್ಥಳಗಳು, ಉದ್ಯಾನವನ ಹಾಗೂ ರಸ್ತೆ ಬದಿ ಸ್ವಚ್ಛವಾಗಿಡುವ ಜವಾಬ್ದಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರಿಬ್ಬರದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಿಎಸ್ಐ ಹನುಮಂತಪ್ಪ ತಳವಾರ, ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಮಾನ ಮನಸ್ಕರ ಸಮಿತಿಯ ಸದಸ್ಯರು, ತಾಪಂ ವ್ಯವಸ್ಥಾಪಕ ಶಾಂತವೀರಯ್ಯ, ಟಿಪಿಒ ಸುವರ್ಣ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರವಿಗೌಡ ಜಂಬಲದಿನ್ನಿ, ಕೊರಡಕೇರಾ ಗ್ರಾಪಂ ಪಿಡಿಒ ಶ್ರೀಶೈಲ ಪೋಲೆಸಿ, ತಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ, ನರೇಗಾ ವಿಭಾಗದ ಸಿಬ್ಬಂದಿ, ಎನ್ಆರ್ಎಲ್ಎಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.