ಕನ್ನಡಪ್ರಭ ವಾರ್ತೆ ಬೆಳಗಾವಿ
ಈ ವೇಳೆ ಬೆಳಗಾವಿ ಲೋಕಸಭಾ ಕ್ಷೇತ್ರದ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಸಂಸದರು ಸಚಿವರ ಗಮನಕ್ಕೆ ತಂದರು. ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ಸುಮಾರು ಎಂಬತ್ತು ಕಿಲೋಮೀಟರ್ಗಿಂತ ಹೆಚ್ಚು ಉದ್ದದ ರಸ್ತೆಗಳ ಅಭಿವೃದ್ಧಿಗೆ ಅಂದಾಜು ₹86 ಕೋಟಿಗೂ ಹೆಚ್ಚು ಅನುದಾನ ಅಗತ್ಯವಿದೆ. ಈ ರಸ್ತೆಗಳ ಸುಧಾರಣೆಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಡಿ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಇದೇ ವೇಳೆ ಗೋಕಾಕದಿಂದ ಯರಗಟ್ಟಿ ಹಾಗೂ ಸವದತ್ತಿ ಮಾರ್ಗವಾಗಿ ಧಾರವಾಡದವರೆಗೆ ಇರುವ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಸಂಸದರು ಮನವರಿಕೆ ಮಾಡಿದರು. ಈ ಮಾರ್ಗವು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತೆರಳುವ ಪ್ರಮುಖ ದಾರಿಯಾಗಿದ್ದು, ವರ್ಷಪೂರ್ತಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಅಪಘಾತಗಳ ಸಂಭವವೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ಧಿಪಡಿಸುವುದು ಅತ್ಯವಶ್ಯಕವಾಗಿದೆ ಎಂದು ಅವರು ಸಚಿವರಿಗೆ ಮನವರಿಕೆ ಮಾಡಿದರು.ಇದೇ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ವಾಹನಗಳ ಮೇಲ್ವಿಚಾರಣೆ ವ್ಯವಸ್ಥೆಯನ್ನು ಬಲಪಡಿಸುವ ಯೋಜನೆಯಡಿ ಸುಮಾರು ₹25 ಕೋಟಿಗೂ ಹೆಚ್ಚು ಅನುದಾನ ಒದಗಿಸುವ ಕುರಿತು ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಕೋರಿದರು. ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸುಮಾರು ಸಾವಿರ ಬಸ್ಸುಗಳಲ್ಲಿ, ಬಸ್ ಡಿಪೋಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಹಾಗೂ ವಿಭಾಗೀಯ ಕಚೇರಿಗಳಲ್ಲಿ ಕೇಂದ್ರ ಸರ್ಕಾರದ ನಿರ್ಭಯ ನಿಧಿ ಯೋಜನೆಯಡಿ ನಿಗಾ ಕ್ಯಾಮೆರಾಗಳನ್ನು ಅಳವಡಿಸುವ ಸುಮಾರು ₹59 ಕೋಟಿಗೂ ಹೆಚ್ಚು ವೆಚ್ಚದ ಯೋಜನೆಗೂ ಶೀಘ್ರ ಅನುಮೋದನೆ ನೀಡುವಂತೆ ಅವರು ಮನವಿ ಮಾಡಿದರು.