ರಾಜ್ಯ ಸರ್ಕಾರ ಕೊಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಹೆಚ್ಚು ಬೆಳೆ ಬೆಳೆಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ಕೊಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಹೆಚ್ಚು ಬೆಳೆ ಬೆಳೆಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಶನಿವಾರ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿನ ತಾಪಂ ಕಚೇರಿಯ ಆವರಣದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಕೊಡುತ್ತಿರುವ ಕೊಳವೆ ಬಾವಿಯ ವಿದ್ಯುತ್ ಸಲಕರಣೆ ವಿತರಣೆ ಮಾಡಿ ಅವರು ಮಾತನಾಡಿದರು. ಸರ್ಕಾರ ಬಡವರು ಹಾಗೂ ಅಲ್ಪಸಂಖ್ಯಾತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರ ಕೊಡ ಮಾಡುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಬೆಳವಣಿಗೆ ಹೊಂದಬೇಕು ಎನ್ನುವುದು ನಮ್ಮೆಲ್ಲರ ಕನಸಾಗಿದೆ. ಅಲ್ಪಸಂಖ್ಯಾತರಿಗೆ ಕೊಳವೆ ಬಾವಿ ಕೊರೆಯಿಸಿ ಅದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವ ಮೂಲಕ ಅವರ ಹೊಲಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿ ಕೊಡುವ ಕಾರ್ಯ ಮಾಡುತ್ತದೆ. ಇದಕ್ಕಾಗಿ ಸರ್ಕಾರ ತಲಾ ₹ 3 ಲಕ್ಷ ಕೊಡಮಾಡುತ್ತದೆ. ನಮ್ಮ ತಾಲೂಕಿನಲ್ಲಿ 5 ಜನರಿಗೆ ಅಲ್ಪ ಸಂಖ್ಯಾತ ಇಲಾಖೆಯು ಕೊಳವೆ ಬಾವಿ ಕೊರೆಯಿಸಿ ಕೊಡುವ ಕಾರ್ಯ ಮಾಡುತ್ತಿದೆ, ಇದಕ್ಕೆ ತಗಲುವ ವೆಚ್ಚವನ್ನು ಸರ್ಕಾರ ಸಂಪೂರ್ಣವಾಗಿ ಭರಿಸುವ ಮೂಲಕ ಬಡತನ ನಿವಾರಣೆಗೆ ಆದ್ಯತೆ ನೀಡುವ ಕಾರ್ಯ ಮಾಡುತ್ತಿದೆ. ಇದರ ದುರುಪಯೋಗವಾಗದಂತೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯತತ್ಪರರಾಗಬೇಕು ಎಂದು ಹೇಳಿದರು. ಈ ವೇಳೆ ಗಂಗಾಧರ ಮೆಣಸಿನಕಾಯಿ, ರಮೇಶ ಹಾಳತೋಟದ, ರುದ್ರಪ್ಪ ಉಮಚಗಿ, ಪ್ರವೀಣ ಗಜಾಕೋಶ, ವಿಶಾಲ ಬಟಗುರ್ಕಿ, ಶೇಖಣ್ಣ, ಹಾಲಪ್ಪ ಸೂರಣಗಿ, ಬಾಬಾಜಾನ್ ನಿಡಗುಂದಿ, ಮಾಗಡಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸೈಯದ್ ಜುಬೇದುಲ್ಲಾ ಸೇರಿದಂತೆ ಅನೇಕರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.